ಹಾವೇರಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು, ಸದ್ಯ ಅಂಚೆ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಹಾವೇರಿ ಜಿಲ್ಲೆಯ ಅಂಚೆ ಮತದಾನದಲ್ಲಿ ಮುನ್ನಡೆ ಕಾಯ್ದುಕೊಂಡವರ ವಿವರ ಈ ಕೆಳಕಂಡಂತಿದೆ.
ಶಿಗ್ಗಾವಿಯಲ್ಲಿ ಬಿಜೆಪಿಯ ಬಸವರಾಜ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ನ ಯಾಸೀರ್ ಖಾನ್ ಪಠಾಣ್ ಹಾಗೂ ಜೆಡಿಎಸ್ನ ಶಶಿಧರ ಯಲಿಗಾರ ಹಿನ್ನಡೆ ಅನುಭವಿಸಿದ್ದಾರೆ.
ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ಶ್ರೀನಿವಾಸ ಮಾನೆ ಮುನ್ನಡೆ ಸಾಧಿಸಿದ್ದರೆ, ಬಿಜೆಪಿಯ ಶಿವರಾಜ ಸಜ್ಜನರ ಹಾಗೂ ಜೆಡಿಎಸ್ನ ಮನೋಹರ ತಹಶಿಲ್ದಾರ
ಹಿನ್ನಡೆ ಕಾಯ್ದುಕೊಂಡಿದ್ದಾರೆ.
ಹಿರೇಕೆರೂರ ಕ್ಷೇತ್ರದಲ್ಲಿ ಬಿಜೆಪಿಯ ಬಿಸಿ ಪಾಟೀಲ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ನ ಯುಬಿ ಬಣಕಾರ ಹಿನ್ನಡೆ ಅನುಭವಿಸಿದ್ದಾರೆ.
ಬ್ಯಾಡಗಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಬಸವರಾಜ ಶಿವಣ್ಣನವರ ಮುನ್ನಡೆ ಸಾಧಿಸಿದ್ದು, ಬಿಜೆಪಿಯ ವಿರೂಪಾಕ್ಷಪ್ಪ ಬಳ್ಳಾರಿಗೆ ಹಿನ್ನಡೆಯಾಗಿದೆ.
ಹಾವೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ರುದ್ರಪ್ಪ ಲಮಾಣಿ ಮುನ್ನಡೆ ಸಾಧಿಸಿದ್ದು, ಬಿಜೆಪಿ ಗವಿಸಿದ್ದಪ್ಪ ದ್ಯಾಮಣ್ಣನವರ ಹಿನ್ನಡೆ ಕಾಯ್ದುಕೊಂಡಿದ್ದಾರೆ.
ರಾಣೇಬೆನ್ನೂರ ಕ್ಷೇತ್ರದಲ್ಲಿ ಕಾಂಗ್ರೆಸ್ನ ಪ್ರಕಾಶ ಕೋಳಿವಾಡ ಮುನ್ನಡೆ ಸಾಧಿಸಿದ್ದರೆ, ಎನ್ಸಿಪಿ ಆರ್. ಶಂಕರ್ ಹಾಗೂ ಬಿಜೆಪಿಯ ಅರುಣಕುಮಾರ ಪೂಜಾರ ಹಿನ್ನಡೆ ಅನುಭವಿಸಿದ್ದಾರೆ.
ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.
2018ರ ಫಲಿತಾಂಶ ಏನಿತ್ತು?
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.
LIVE| ಕರ್ನಾಟಕ ಚುನಾವಣಾ ಫಲಿತಾಂಶ 2023: ಕ್ಷಣ ಕ್ಷಣದ ಮಾಹಿತಿಗಾಗಿ ನೇರಪ್ರಸಾರ ವೀಕ್ಷಿಸಿ