ಬೆಂಗಳೂರು: ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಮಾಡಿರುವ ಕೃತ್ಯದ ಹಿಂದೆ ಯಾರೇ ತಪ್ಪು ಮಾಡಿದರೂ ಸರಿಯಾದ ತನಿಖೆ ಮಾಡಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಕರೆ ಬಂದಿರುವ ಘಟನೆ ಬಗ್ಗೆ ತನಿಖೆ ಮಾಡಿಸುತ್ತೇವೆ, ಮಕ್ಕಳ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ, ಅವರು ಆತಂಕದಲ್ಲಿ ಶಾಲೆಗೆ ಹೋಗುವಂತಾಗಬಾರದು, ಇಂತಹ ಸಮಾಜಘಾತುಕ ಕುಕೃತ್ಯದಲ್ಲಿ ತೊಡಗಿರುವವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ, ಈ ವಿಷಯದಲ್ಲಿ ರಾಜಿ ಮಾಡುವುದಿಲ್ಲ. ನಾವು ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದರು.
ನಗರ ಪೊಲೀಸ್ ಆಯುಕ್ತ ಬಿ ದಯಾನಂದ್, ಈ ಬಗ್ಗೆ ನಮಗೆ ಮಾಹಿತಿ ಬಂದ ಕೂಡಲೇ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಶಾಲೆಗಳಿಗೆ ನಮ್ಮ ಬಾಂಬ್ ನಿಷ್ಕ್ರಿಯ ದಳ ಹೋಗಿ ತಪಾಸಣೆ ನಡೆಸಿದೆ. ಈ ಹಿಂದೆಯೂ ಸಹ ಈ ರೀತಿ ಬೆದರಿಕೆ ಕರೆ ಬಂದಿತ್ತು. ಬಹುಶಃ ಇದು ಸುಳ್ಳು ಬಾಂಬ್ ಬೆದರಿಕೆ ಅನ್ನಿಸುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಬಾಂಬ್ ಬೆದರಿಕೆ
ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಮೂಲಕ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ನಗರದ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 7 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಸದಾಶಿವನಗರದ ನೀವ್ ಅಕಾಡೆಮಿ, ಯಲಹಂಕದ ಕೆಲವು ಶಾಲೆಗಳಿಗೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ತೆರಳಿದ್ದು, ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ.
ಬೆಳ್ಳಂಬೆಳಗ್ಗೆ ಬೆಂಗಳೂರಿನ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ