ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನ ಇಂದು ಸೋಮವಾರ ಬೆಳಗ್ಗೆ 11ಕ್ಕೆ ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು.
ಅಂದಹಾಗೆ ಕಲಾಪದಲ್ಲಿ ಬಿಜೆಪಿ ಸದಸ್ಯರು ಕೇಸರಿ ಶಾಲು ಧರಿಸಿ ಭಾಗವಹಿಸಿದ್ದಾರೆ. ಜಂಟಿ ಅಧಿವೇಶನದ ಮೊದಲ ದಿನವೇ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಧರಿಸಿಕೊಂಡು ಸದನಕ್ಕೆ ಆಗಮಿಸಿದ್ದು ವಿಶೇಷವಾಗಿತ್ತು. ಸದನ ಪ್ರವೇಶಿಸುವ ಮೊದಲು ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿ ಸಿಬ್ಬಂದಿ ಕೇಸರಿ ಶಾಲುಗಳನ್ನು ವಿತರಿಸಿದರು.
ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಉಪನಾಯಕ ಅರವಿಂದ ಬೆಲ್ಲದ್ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಕುಳಿತಿದ್ದು ಎದ್ದು ಕಾಣುತ್ತಿತ್ತು.
ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜವನ್ನು ತೆರವು ಮಾಡಿದ ವೇಳೆ ನಡೆದ ಪ್ರತಿಭಟನೆಯಲ್ಲಿ ಭಜರಂಗದಳ ವಿಶ್ವ ಹಿಂದು ಪರಿಷತ್, ಬಿಜೆಪಿ ಸೇರಿದಂತೆ ಮತ್ತಿತರ ಸಂಘಟನೆಗಳು ಕೇಸರಿ ಶಾಲು ಹಾಕಿಕೊಂಡು ಪ್ರತಿಭಟನೆ ನಡೆಸಿದ್ದವು.
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕೇಸರಿ ಶಾಲು ಹಾಕಿಕೊಂಡಿದ್ದಕ್ಕೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾಗಿತ್ತು. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಹ ಕೇಸರಿ ಶಾಲು ಹಾಕುವ ಔಚಿತ್ಯವನ್ನು ಪ್ರಶ್ನೆ ಮಾಡಿದ್ದರು. ಇದೀಗ ಬಿಜೆಪಿಯ ಎಲ್ಲ ಸದಸ್ಯರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಮಿರಮಿರ ಮಿಂಚುತ್ತಿದ್ದರು.