ಬೆಂಗಳೂರು: ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ಭಾರಿ ಅಸಮಾಧಾನಗೊಂಡಿರುವ ಪರಿಷತ್ ಹಿರಿಯ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್, ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಬಹಳ ಚೆನ್ನಾಗಿ ಗೊತ್ತಿದೆ ಎಂದು ಹರಿಪ್ರಸಾದ್ ಹರಿಹಾಯ್ದಿದ್ದರು.
ಬಿಕೆ ಹರಿಪ್ರಸಾದ್ ಹೇಳಿಕೆ ವಿರುದ್ಧ ಕೆಲ ಕಾಂಗ್ರೆಸ್ ನಾಯಕರೂ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಬಿಕೆ ಹರಿ ಪ್ರಸಾದ್ ಟ್ವೀಟ್ ಮಾಡಿದ್ದು, “ನಾನು ವೈಯಕ್ತಿಕ ಹಿತಾಸಕ್ತಿಗಾಗಿ ಎಂದೂ ರಾಜಕೀಯ ಮಾಡಿದವನಲ್ಲ. ಸಾಮಾಜಿಕ ಬದಲಾವಣೆಗಾಗಿ ರಾಜಕೀಯಕ್ಕೆ ಬಂದವನು. ಮಂತ್ರಿ, ಮುಖ್ಯಮಂತ್ರಿ ಸೇರಿದಂತೆ ಯಾವ ಅಧಿಕಾರದ ಮೇಲೂ ಲಾಬಿ ನಡೆಸಿದ ಇತಿಹಾಸವಿಲ್ಲ. ಅದರ ಮೇಲೆ ಆಸೆಯೂ ಇಲ್ಲ. ಸಾಮಾಜಿಕ ನ್ಯಾಯದ ಪರ ನನ್ನ ಧ್ವನಿಯನ್ನು ಎಂದೂ ಅಡಗಿಸಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.