More

    ಕಸ್ತೂರಿ ರಂಗನ್ ವರದಿ ಜಾರಿಗೆ ಸಿದ್ದತೆ

    ಎನ್.ಆರ್.ಪುರ: ಕೇಂದ್ರದ ನರೇಂದ್ರ ಮೋದಿಯ ಬಿಜೆಪಿ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗೆ ತರಲು ಎಲ್ಲ ಸಿದ್ದತೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ವಕ್ತಾರ ರಮೇಶ ಹೆಗ್ಡೆ ಆರೋಪಿಸಿದರು.
    ಶುಕ್ರವಾರ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ 2014, 2018ರಲ್ಲಿ ರಾಷ್ಟ್ರೀಯ ಹಸಿರು ಪೀಠಕ್ಕೆ ಡಾ.ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದಾಗಿ ಪ್ರಮಾಣ ಪತ್ರ ಸಲ್ಲಿಸಿದ್ದರಿಂದ ಹಸಿರುಪೀಠ ಕೇಂದ್ರ ಸರ್ಕಾರಕ್ಕೆ ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶದ ಅಂತಿಮ ಅಧಿಸೂಚನೆ ಹೊರಡಿಸುವಂತೆ ನಿರ್ದೇಶಿಸಿರುತ್ತದೆ. ಈ ಮೂಲಕ 2014ರ ಚುನಾವಣೆ ವೇಳೆ ಬಿಜೆಪಿ ನಾಯಕರು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಡಾ.ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದಿಲ್ಲ ಎಂದು ನೀಡಿದ ಭರವಸೆ ಸುಳ್ಳಾಗಿದೆ ಎಂದು ಟೀಕಿಸಿದರು.
    ನರೇಂದ್ರ ಮೋದಿ ಸರ್ಕಾರಕ್ಕೆ ಪರಿಸರ ಸಂರಕ್ಷಣಾ ಕಾಯ್ದೆ 1986ರಂತೆ ವರದಿ ಕೈ ಬಿಡುವ ಅಧಿಕಾರವಿದ್ದರೂ ಕೈ ಬಿಟ್ಟಿಲ್ಲ. 2015, 2017, 2018 ಹಾಗೂ 2022ರಲ್ಲಿ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೆ ಸಂಬಂಧಿಸಿದ ಪ್ರಾಥಮಿಕ ಕರಡು ಅಧಿಸೂಚನೆಯನ್ನು 4ನೇ ಬಾರಿ ಹೊರಡಿಸಿ ಪಶ್ಚಿಮ ಘಟ್ಟದ ಜನರಿಗೆ ದ್ರೋಹ ಬಗೆದಿದೆ. 2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಡಾ.ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ ಸಂಪುಟ ಸಭೆ ನಿರ್ಣಯ ಕೈ ಗೊಂಡು ವರದಿ ಕೈ ಬಿಡುವಂತೆ ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವರಿಗೆ ಸಲ್ಲಿಸಿದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ದೂರಿದರು.
    2015, 2016ರಲ್ಲಿ ಕೇಂದ್ರದ ಅರಣ್ಯ ಸಚಿವರು ಡಾ.ಕಸ್ತೂರಿ ರಂಗನ್ ವರದಿ ಅನುಷ್ಟಾನ ಕುರಿತು ಚರ್ಚೆ ನಡೆಸಲು ಆಯೋಜಿಸಿದ್ದ ಮಹತ್ವದ ಸಭೆಗೆ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಶಿವಮೊಗ್ಗ ಸಂಸದ ಯಡಿಯೂರಪ್ಪ ಹಾಗೂ ಇತರ ಬಿಜೆಪಿ ಸಂಸದರು ಗೈರು ಹಾಜರಾಗಿದ್ದರು. ಇತ್ತೀಚೆಗೆ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಡಾ.ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೇಂದ್ರ ಅರಣ್ಯ ಇಲಾಖೆ ನಿವೃತ್ತ ಮಹಾ ನಿರ್ದೇಶಕ ಸಂಜಯ್ ಕುಮಾರ್ ನೇತೃತ್ವದ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದರು. ಆ ಸಭೆಯಲ್ಲಿ ಪಶ್ಚಿಮ ಘಟ್ಟದ ಭೌತಿಕ, ಭೂ ದೃಶ್ಯ ಕಾರ್ಯ ನಡೆಸಿ ಅದರ ವರದಿ ಬಂದ ನಂತರ ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಅಂತಿಮ ಘೋಷಣೆ ಮಾಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯಿಂದ ಪಶ್ಚಿಮ ಘಟ್ಟಗಳಲ್ಲಿ ಡಾ.ಕಸ್ತೂರಿ ರಂಗನ್ ವರದಿ ಜಾರಿಗೆ ಬರುವುದು ಗ್ಯಾರಂಟಿಯಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts