ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಕಾಯಿಲೆ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. ಅಂತೆಯೇ ಕರ್ನಾಟಕ ವಸತಿ ಸಂಘ-ಸಂಸ್ಥೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಮಾರ್ಚ್ 23ರಂದು ಸುತ್ತೋಲೆ ಹೊರಡಿಸಲಾಗಿತ್ತು. ಇದೀಗ, ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ವಿವಿಧ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಮೇ 6 ಪ್ರವೇಶ ಪರೀಕ್ಷೆ ನಿಗದಿ ಪಡಿಸಲಾಗಿತ್ತು. ಅರ್ಜಿ ಸಲ್ಲಿಕೆ ಹಾಗೂ ಪ್ರವೇಶ ಪರೀಕ್ಷೆಯ ಮುಂದಿನ ದಿನಾಂಕವನ್ನು ಅಭ್ಯರ್ಥಿಗಳಿಗೆ ತಿಳಿಸಲಾಗುವುದು ಎಂದು ಪ್ರಾಧಿಕಾರ ಹೇಳಿದೆ. ಅಭ್ಯರ್ಥಿಗಳು ವಿವರಗಳಿಗಾಗಿ kea.kar.nic.in ಗಮನಿಸುತ್ತ ಇರಬೇಕೆಂದು ಕೋರಲಾಗಿದೆ.
ದೇಶಾದ್ಯಂತ ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈಗಾಗಲೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳು ಬಹುತೇಕ ಸ್ಥಗಿತಗೊಂಡಂತಾಗಿವೆ. ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಶಾಲೆಗಳಿಗೆ ಬೇಸಿಗೆ ರಜೆ ನೀಡಿದ್ದರೆ, ಕಾಲೇಜುಗಳಿಗೆ ಏಪ್ರಿಲ್ 14ರವರೆಗೆ ರಜೆ ಘೋಷಿಸಲಾಗಿದೆಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಶಿಕ್ಷಕರಿಗೆ ಏಪ್ರಿಲ್ 14ರವರೆಗೆ ಮಾತ್ರ ರಜೆ; ಮೇ 20ರವರೆಗೆ ಅಲ್ಲ: ಕಾಲೇಜು ಶಿಕ್ಷಣ ಆಯುಕ್ತರು