ಕೆಂಭಾವಿ: ಕಾಲುವೆಗೆ ಸಮರ್ಪಕ ನೀರು ಹರಿಸುವಂತೆ ಒತ್ತಾಯಿಸಿ ರೈತರು ಪಟ್ಟಣದ ಗುತ್ತಿ ಬಸವಣ್ಣ ಏತ ನೀರಾವರಿ ಜಾಕ್ವೆಲ್ ಬಳಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.
ಯಾಳಗಿ, ವಂದಗನೂರ, ಹದನೂರ, ಚಿಂಚೋಳಿ ಸೇರಿ ಏತ ನೀರಾವರಿ ಕಾಲುವೆ ರೈತರು ಮುಖ್ಯದ್ವಾರದ ಬಳಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ರೈತರು, ನೂರಾರು ಎಕರೆ ಪ್ರದೇಶದಲ್ಲಿ ತೊಗರಿ, ಹತ್ತಿ, ಮೆಣಸಿನಕಾಯಿ ಬೆಳೆ ಬೆಳೆಯಲಾಗಿದೆ. ಸಧ್ಯ ಈ ಬೆಳೆಗೆ ನೀರಿನ ಅಗತ್ಯವಿದೆ. ಏತ ನೀರಾವರಿ ಯೋಜನೆಯಲ್ಲಿ ಐದು ಬೃಹತ್ ಯಂತ್ರಗಳ ಮೂಲಕ ನೀರು ಕಾಲುವೆಗೆ ಹರಿಬಿಡುವ ನಿಯಮ ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲುವೆಗೆ ಹರಿಸುವ ನೀರು ಸ್ಥಗಿತಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕಾಲುವೆಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಹಾಗೊಂದು ವೇಳೆ ವಿಳಂಬ ಮಾಡಿದ್ದಲ್ಲಿ ಇಲಾಖೆ ಕಚೇರಿ ಎದುರು ಬೃಹತ್ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆ ವಿಷಯ ಅರಿತ ನೀರಾವರಿ ಇಲಾಖೆ ಇಇ ಬಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ಸಮಾಧಾನ ಮಾಡಿ ನೀರು ಬಿಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು. ಸುತ್ತಲಿನ ಐದು ಗ್ರಾಮದ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.