ತುಮಕೂರು: ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡುವಂತೆ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆಯಲಾಗುವುದು. ನಾವು ಕೇಳುವುದರಲ್ಲಿ ತಪ್ಪೇನಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರಶ್ನಿಸಿದ್ದಾರೆ.
ತುಮಕೂರಿನಲ್ಲಿ ಈ ಕುರಿತು ಮಾತನಾಡಿದ ಸಚಿವ ರಾಜಣ್ಣ ಅಕ್ಟೋಬರ್ ಮೊದಲ ವಾರದಲ್ಲಿ ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ಅನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಸನಾತನ ಧರ್ಮ ಹೇಳಿಕೆ; ಉದಯನಿಧಿ ಸ್ಟಾಲಿನ್ಗೆ ಚಾಟಿ ಬೀಸಿದ ಮದ್ರಾಸ್ ಹೈಕೋರ್ಟ್
ಪರಿಶಿಷ್ಟ ಜಾತಿ-ಪಂಗಡ, ವೀರಸೈವ-ಲಿಂಗಾಯತ, ಅಲ್ಪಸಂಖ್ಯಾತ ಸಮುದಾಯದಕ್ಕೆ ತಲಾ ಒಂದು ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಹೈಕಮಾಂಡ್ಗೆ ಮನವಿ ಸಲ್ಲಿಸಲಾಗುವುದು. ಈ ವಿಚಾರವಾಗಿ ಅಕ್ಟೋಬರ್ ಮೊದಲ ವಾರದಲ್ಲಿ ಹೈಕಮಾಂಡ್ ಭೇಟಿ ಮಾಡಿ ಮನವರಿಕೆ ಮಾಡಲಾಗುವುದು. ಈ ವಿಚಾರಕ್ಕೆ ಸಹಮತ ವ್ಯಕ್ತಪಡಿಸಿರುವ ಮುಖಂಡರ ನಿಯೋಗವನ್ನು ಹೈಕಮಾಂಡ್ ಬಳಿಗೆ ಕರೆದುಕೊಂಡು ಹೋಗಲಾಗುವುದು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾವು ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಿದೆ. ಈ ಸಂಬಂಧ ಎಲ್ಲಾ ಸಮುದಾಯದ ಬೆಂಬಲ ನಮಗೆ ಬೇಕಾಗುತ್ತದೆ. ಮೂವರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಿದರೆ ನಮಗೆ ಹಚ್ಚಿನ ಅನುಕೂಲವಾಗಲಿದೆ. ಈ ಮಾತನ್ನು ನಾನು ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್ ವಿರುದ್ಧ ನೀಡುತ್ತಿಲ್ಲ. ಇತರರಿಗೂ ಅವಕಾಶ ನೀಡಬೇಕೆಂದು ಕೇಳುತ್ತಿದ್ದೇವೆ. ಅದರಲ್ಲಿ ತಪ್ಪೇನಿದೆ ಎಂದು ಸಚಿವ ಕೆ.ಎನ್. ರಾಜಣ್ಣ ಪ್ರಶ್ನಿಸಿದ್ದಾರೆ.