More

    ಕೋಲಾರ ಲೋಕಸಭೆ ಕ್ಷೇತ್ರ; ಜಿಲ್ಲಾ ನಾಯಕರ ಜತೆ ಕುಮಾರಸ್ವಾಮಿ ಸಮಾಲೋಚನೆ

    ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಕೋಲಾರ ಲೋಕಸಭೆ ಕ್ಷೇತ್ರದ ಮುಖಂಡರು, ಶಾಸಕರು, ಮಾಜಿ ಶಾಸಕರು ಹಾಗೂ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿಗಳ ಜತೆ ಮಹತ್ವದ ಸಮಾಲೋಚನೆ ನಡೆಸಿದರು.

    ಬಿಡದಿಯ ತಮ್ಮ ತೋಟದ ಮನೆಯಲ್ಲಿ ಈ ಸಭೆಯನ್ನು ನಡೆಸಿದ ಅವರು, ಕ್ಷೇತ್ರದ ಪರಿಸ್ಥಿತಿ, ಪಕ್ಷದ ಸಂಘಟನೆ, ಸಿದ್ಧತೆ, ಅಭ್ಯರ್ಥಿ ಇತ್ಯಾದಿ ಅಂಶಗಳ ಬಗ್ಗೆ ನಾಯಕರಿಂದ ಮಾಹಿತಿ ಪಡೆದುಕೊಂಡರು.

    ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ ಅವರೊಂದಿಗೆ ಪಕ್ಷದ ಕೋಲಾರ ಜಿಲ್ಲಾಧ್ಯಕ್ಷ ಹಾಗೂ ಶಾಸಕರಾದ ವೆಂಕಟ ಶಿವಾರೆಡ್ಡಿ, ಶಾಸಕರಾದ ಸಮೃದ್ಧಿ ಮಂಜುನಾಥ್, ಮೇಲೂರು ರವಿ, ಮಾಜಿ ಉಪ ಸ್ಪೀಕರ್ ಕೆ.ಎಂ.ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಮಾಲೂರಿನ ರಾಮೇಗೌಡ, ಬಂಗಾರಪೇಟೆಯ ಮಲ್ಲೇಶ್ ಬಾಬು, ಕೋಲಾರದ ಸಿಎಂಆರ್ ಶ್ರೀನಾಥ ಅವರು ಸೇರಿ ಹಲವಾರು ಪ್ರಮುಖ ನಾಯಕರು ಈ ಸಭೆಯಲ್ಲಿ ಹಾಜರಿದ್ದರು.

    ಕ್ಷೇತ್ರಗಳ ಹಂಚಿಕೆ ವೇಳೆ ಚರ್ಚೆ

    ಕೋಲಾರ ಕ್ಷೇತ್ರದಲ್ಲಿ ಮೂವರು ಶಾಸಕರು ಇದ್ದು, ಕಳೆದ ವಿಧಾನಸಭೆಯಲ್ಲಿ ಅತ್ಯುತ್ತಮ ಮತ ಪ್ರಮಾಣವನ್ನು ಜೆಡಿಎಸ್ ಗಳಿಸಿದೆ. ಹೀಗಾಗಿ ನಮ್ಮ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಪಕ್ಷದ ನಿಷ್ಠಾವಂತ ದಲಿತ ನಾಯಕರೊಬ್ಬರನ್ನು ಗೆಲ್ಲಿಸಿಕೊಳ್ಳಬಹುದು ಎಂದು ಎಲ್ಲ ಮುಖಂಡರು ಕುಮಾರಸ್ವಾಮಿ ಆವರಿಗೆ ಸಲಹೆ ಮಾಡಿದರು.
    ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕೋಲಾರ ಕ್ಷೇತ್ರದಲ್ಲಿ ಉತ್ತಮ ವಾತಾವರಣ ಇದೆ. ಜೆಡಿಎಸ್ ಈಗ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿರುವ ಕಾರಣಕ್ಕೆ ಇನ್ನೂ ಅನುಕೂಲಕರ ವಾತಾವರಣ ಇದೆ. ಕ್ಷೇತ್ರದ ಎಲ್ಲ ಸ್ಥಿತಿಗತಿಗಳನ್ನು ನಾನು ಕ್ಷೇತ್ರ ಹಂಚಿಕೆ ಚರ್ಚೆ ಸಂದರ್ಭದಲ್ಲಿ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಹಾಗೂ ರಾಜ್ಯ ಬಿಜೆಪಿ ನಾಯಕರ ಜತೆ ಚರ್ಚೆ ಮಾಡುತ್ತೇನೆ ಎಂದು ಮುಖಂಡರಿಗೆ ತಿಳಿಸಿದರು.

    ಮೈತ್ರಿ ಧರ್ಮ ಪಾಲನೆ ಮಾಡಿ

    ಮೈತ್ರಿ ಧರ್ಮ ಪಾಲನೆ ಮಾಡಬೇಕು ಹಾಗೂ ಪ್ರಧಾನಿ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಬದ್ಧತೆ, ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಕುಮಾರಸ್ವಾಮಿ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts