ಕೊಪ್ಪಳ: ನರೇಗಾ ಹಾಗೂ ಸ್ವಚ್ಛ ಭಾರತ್ ಮಿಷನ್ನಡಿ ಕೈಗೊಳ್ಳುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಲಿ ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ಫೌಜಿಯಾ ತರನ್ನುಮ್ ಸೂಚಿಸಿದರು.
ತಾಲೂಕಿನ ಬೆಟಗೇರಿ, ಮತ್ತೂರು, ಅಳವಂಡಿ ಹಾಗೂ ಹಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ಶನಿವಾರ ವಿವಿಧ ಕಾಮಗಾರಿ ಪರಿಶೀಲಿಸಿ ಮಾತನಾಡಿದರು. ಗ್ರಾಪಂ ಮಟ್ಟದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲಾಗುತ್ತಿದೆ. ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು. ಯಾವುದೇ ಲೋಪ ದೋಷಗಳಾಗಬಾರದೆಂದು ಪಿಡಿಒ ಹಾಗೂ ತಾಂತ್ರಿಕ ಸಹಾಯಕರಿಗೆ ಸೂಚಿಸಿದರು.
ಬೆಟಗೇರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಬಿಸಿಯೂಟ, ಕುಡಿವ ನೀರಿನ ವ್ಯವಸ್ಥೆ ಪರಿಶೀಲಿಸಿದರು. ಅಡುಗೆ ಕೋಣೆ, ಭೋಜನಾಲಯ, ಶೌಚಗೃಹ, ಮಳೆ ನೀರು ಕೊಯ್ಲು, ಆಟದ ಮೈದಾನ ನಿರ್ಮಾಣ ಕಾಮಗಾರಿಗಳನ್ನು ತುರ್ತಾಗಿ ಮುಗಿಸಬೇಕು. ನರೇಗಾ ಕೂಲಿಕಾರರಿಗೆ ಎನ್ಎಂಆರ್ ಅವಧಿ ಮುಕ್ತಾಯವಾದ ಏಳು ದಿನಗಳಲ್ಲಿ ಕೂಲಿ ಹಣ ಪಾವತಿಸಿ ಎಂದು ತಿಳಿಸಿದರು.
ಸಂಜೀವಿನಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರೊಂದಿಗೆ ಸಭೆ ನಡೆಸಿ, ವ್ಯವಹಾರ ನಿರ್ವಹಣೆ ಕುರಿತು ಚರ್ಚಿಸಿದರು. ಜಿಪಂ ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಸುಭಾನಸಾಬ್, ತಾಪಂ ಇಒ ಕೆ.ಎಂ.ಮಲ್ಲಿಕಾರ್ಜುನ, ಸಹಾಯಕ ನಿರ್ದೇಶಕಿ ಕೆ.ಸೌಮ್ಯ ಹಾಗೂ ಪಿಡಿಒಗಳಿದ್ದರು.