ಕೊಪ್ಪಳ: ಕೋವಿಡ್ ಪರಿಸ್ಥಿತಿ ನಿರ್ವಹಣೆಗಾಗಿ ಆರೋಗ್ಯ ಸಿಬ್ಬಂದಿ ಸಂಖ್ಯೆ ಹೆಚ್ಚಿಸುವುದರ ಜತೆಗೆ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆ ನೀಡಬೇಕೆಂದು ಆಗ್ರಹಿಸಿ ಎಐಡಿವೈಒ ಸಂಘಟನೆಯಿಂದ ಭಾನುವಾರ ಆನ್ಲೈನ್ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯದಲ್ಲಿ ಬೆಡ್, ಆಕ್ಸಿಜನ್, ವೆಂಟಿಲೇಟರ್, ಶವ ಸಂಸ್ಕಾರಕ್ಕೂ ಸರತಿಯಲ್ಲಿ ನಿಲ್ಲುವ ಪರಿಸ್ಥಿತಿ ಇದೆ. ಸೋಂಕಿತರ ಸಂಖ್ಯೆಗೆ ತಕ್ಕಂತೆ ಅಗತ್ಯ ಪ್ರಮಾಣದ ಆರೋಗ್ಯ ಸಿಬ್ಬಂದಿ ಇಲ್ಲದಿರುವುದು ಸಾವಿನ ಸಂಖ್ಯೆ ಹೆಚ್ಚಲು ಕಾರಣವಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಅಗತ್ಯ ಶಿಕ್ಷಣ ಪಡೆದ ಅನೇಕ ನಿರುದ್ಯೋಗಿಗಳಿದ್ದಾರೆ. ಕೂಡಲೇ ಸಿಬ್ಬಂದಿ ನೇಮಕ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಬೇಕು.
ಆರೋಗ್ಯ ಇಲಾಖೆಯ ಎಲ್ಲ ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು. ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳನ್ನು ಬಲಪಡಿಸಬೇಕು. ಸಂಭಾವ್ಯ ಮೂರನೇ ಅಲೆ ನಿಭಾಯಿಸಲು ಸಿದ್ಧತೆ ಕೈಗೊಳ್ಳಬೇಕು. ಎಲ್ಲರಿಗೂ ಉಚಿತ ಲಸಿಕೆ ನೀಡಬೇಕು. ಹಳ್ಳಿಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಬೇಕೆಂದು ಪ್ರತಿಭಟನಕಾರರು ಒತ್ತಾಯಿಸಿದರು.
ಜಿಲ್ಲಾ ಸಂಚಾಲಕ ಶರಣು ಪಾಟೀಲ್, ಇತರ ಪದಾಧಿಕಾರಿಗಳಾದ ಮಾರುತಿ, ಪ್ರವೀಣ್, ಶರಣು ಅಂಗಡಿ, ಮಂಜುನಾಥ, ವಿರುಪಾಕ್ಷಿ, ಬಸವರಾಜ ಹಾಗೂ ಇತರರು ಇದ್ದರು.