ಕೊಪ್ಪಳದಲ್ಲಿ ಸಭೆ ಆಯೋಜನೆ
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕ್ರಿಯಾಶೀಲವಾಗಿರುವ ಸಂಘ, ಸಂಸ್ಥೆಗಳು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ವಿವಿಧ ಸಂಘ, ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಕರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಮಾನವ ಸಂಪನ್ಮೂಲದ ಕೊರತೆಯಾಗಬಹುದು. ಹೀಗಾಗಿ ಸೇವಾ ಮನೋಭಾವನೆ ಹೊಂದಿರುವ ಸಂಘ, ಸಂಸ್ಥೆಗಳು ಮಾನವ ಸಂಪನ್ಮೂಲವನ್ನು ಒದಗಿಸಬೇಕೆಂದು ಕೋರಿದರು.
ಜಿಲ್ಲೆಯ ಆಸ್ಪತ್ರೆಗಳಲ್ಲಿ ಶೇ.90 ಬೆಡ್ಗಳು ಭರ್ತಿಯಾಗಿವೆ. ಆಸ್ಪತ್ರೆಗಳಲ್ಲಿ ಖಾಲಿಯಾಗುವ ಬೆಡ್ಗಳ ಬಗ್ಗೆ ಮಾಹಿತಿ ಇಲ್ಲದ ಹಿನ್ನೆಲೆಯಲ್ಲಿ ಯಾವ ಆಸ್ಪತ್ರೆಗಳಲ್ಲೂ ಬೆಡ್ಗಳಿಲ್ಲ ಎಂದು ರೋಗಿಗಳಲ್ಲಿ ನಕಾರಾತ್ಮಕ ಭಾವನೆ ಮೂಡುತ್ತಿದೆ. ಇಂತಹ ಸಮಸ್ಯೆಗಳನ್ನು ದೂರ ಮಾಡಲು ತಂತ್ರಜ್ಞಾನದ ಮಾಹಿತಿ ಹೊಂದಿರುವ ಮಾನವ ಸಂಪನ್ಮೂಲ ಕಲ್ಪಿಸಬೇಕು. ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್ಗಳು ಖಾಲಿ ಇವೆ. ರೋಗಿಯ ಆರೋಗ್ಯದ ಗಂಭೀರತೆ ಆಧಾರದ ಮೇಲೆ ಹೆಚ್ಚಿನ ಚಿಕಿತ್ಸೆಗೆ ಯಾವ ಆಸ್ಪತ್ರೆಗೆ ದಾಖಲಾಗಬೇಕು ಎಂಬ ಮಾಹಿತಿ ಲಭ್ಯವಾಗುವಂತೆ ಆಗಬೇಕು.
ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾದಲ್ಲಿ ಸ್ವಚ್ಛತೆ ನಿರ್ವಹಣೆಗೂ ಸ್ವಯಂ ಸೇವಕರು ಬೇಕಾಗುತ್ತಾರೆ. ಸೋಂಕಿತರ ಪರೀಕ್ಷೆಗೆ ಮಾದರಿ ಸಂಗ್ರಹಿಸಲು, ಪ್ರಯೋಗಾಲಯಗಳಲ್ಲಿ ಕಾರ್ಯನಿರ್ವಹಿಸಲು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು, ತಂತ್ರಜ್ಞರು ಲಭ್ಯವಿದ್ದಲ್ಲಿ ಮುಂದೆ ಬರಬೇಕು. ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್ಗಳಿದ್ದು, ನಿರ್ವಹಣೆಗೆ ತಜ್ಞರನ್ನು ನಿಯೋಜಿಸಲಾಗಿದೆ. ಆಕ್ಸಿಜನ್ ಸಿಲಿಂಡರ್ಗಳಲ್ಲಿ ಲಭ್ಯವಿರುವ ಹಾಗೂ ಅಗತ್ಯ ಆಮ್ಲಜನಕದ ಪ್ರಮಾಣದ ಬಗ್ಗೆ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಲು ಸಿಬ್ಬಂದಿಯ ಅಗತ್ಯ ಇದೆ ಎಂದು ಜಿಲ್ಲಾಧಿಕಾರಿ ಹೇಳಿದರು.