ಕೊಪ್ಪಳ: ವೃತ್ತಿಪರ ಕೋರ್ಸ್ ಅಭ್ಯಾಸ ಮಾಡುತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸುವಂತೆ ಒತ್ತಾಯಿಸಿ ಎಸ್ಎಫ್ಐ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡ ವಿದ್ಯಾರ್ಥಿಗಳ ಮಾದರಿಯಲ್ಲಿ ವೃತ್ತಿಪರ ಕೋರ್ಸ್ ಅಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೂ ಪ್ರೋತ್ಸಾಹಧನ ನೀಡಲು ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ಆದರೆ, ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುತ್ತಿಲ್ಲ. ಮೆರಿಟ್ ಆಧಾರದಲ್ಲಿ ಕೆಲ ವಿದ್ಯಾರ್ಥಿಗಳಿಗೆ ಮಾತ್ರ ನೀಡುತ್ತಿರುವುದು ಸರಿಯಲ್ಲ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತೊಂದೆಯಾಗಲಿದೆ. ಅರ್ಜಿ ಆಹ್ವಾನಿಸಿದಾಗ ಮೆರಿಟ್ ಆಧಾರದಲ್ಲಿ ಪರಿಗಣಿಸುವುದಾಗಿ ತಿಳಿಸಿಲ್ಲ. 2019-20ರಲ್ಲಿ ಅರ್ಜಿ ಸಲ್ಲಿಸಿದ ಎಲ್ಲರಿಗೂ ಪ್ರೋತ್ಸಾಹಧನ ಪಾವತಿಯಾಗಿದೆ. ಆದರೆ, ಅನುದಾನ ಕೊರತೆ ನೆಪವೊಡ್ಡಿ ಈ ವರ್ಷದಿಂದ ನಿಯಮ ಬದಲಿಸಿರುವುದು ಸರಿಯಲ್ಲವೆಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಕರೊನಾದಿಂದಾಗಿ ಎಲ್ಲ ವರ್ಗದವರೂ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಅರ್ಜಿ ಸಲ್ಲಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು. ಎಸ್ಎಫ್ಐ ಜಿಲ್ಲಾಧ್ಯಕ್ಷ ಗ್ಯಾನೇಶ ಕಡಗದ, ಪದಾಧಿಕಾರಿಗಳಾದ ಎಂ.ಸಿದ್ದಪ್ಪ, ಶಂಕರ ಇತರರಿದ್ದರು.