ಕೊಪ್ಪಳ: ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಬಲೀಕರಣ ಹಾಗೂ ಜೀವನೋಪಾಯ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೇಶಕಿ ಪಿ.ಐ. ವಿದ್ಯಾ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಜಿಲ್ಲೆಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಹಾಗೂ ಸಂಜೀವಿನಿ-ಎನ್ಆರ್ಎಲ್ಎಂ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಶುಕ್ರವಾರ ಮಾತನಾಡಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಸದ್ಬಳಕೆ ಮಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾಧಿಕಾರಿ ನಲಿನ್ ಅತುಲ್, ತಾಪಂ ಇಒಗಳು, ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಭಿಯಾನ ವ್ಯವಸ್ಥಾಪಕರು, ಸಮುದಾಯ ಸಂಘಟನಾಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಮಾರಾಟ ಮಳಿಗೆಗಳಿಗೆ ಭೇಟಿ: ಗವಿಮಠ ಆವರಣದಲ್ಲಿ ಅಸ್ಮಿತೆ, ಸ್ವಾವಲಂಬಿ ಬದುಕು, ಸಮೃದ್ಧಿ ಬದುಕು ಮತ್ತು ಸಂತೋಷದ ಬದುಕು ಶೀರ್ಷಿಕೆಯಡಿ ಆಯೋಜಿಸಲಾದ ಸ್ವ-ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಮಳಿಗೆಗಳಿಗೆ ಭೇಟಿ ನೀಡಿದ ವಿದ್ಯಾ ಅವರು, ಸಂಘದ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳನ್ನು ವೀಕ್ಷಿಸಿ, ಮಾಹಿತಿ ಪಡೆದುಕೊಂಡರು ಮತ್ತು ಅವುಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.