ಕೊಪ್ಪಳ: ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿರುವ ಯುವತಿಗೆ ನ್ಯಾಯ ಕೊಡಿಸುವ ಬದಲು, ಯುವತಿ ವಿರುದ್ಧವಾಗಿಯೇ ಹೇಳಿಕೆ ನೀಡುವ ಮೂಲಕ ರಾಜ್ಯ ಸರ್ಕಾರ ಮನುವಾದ ಹೇರಿಕೆಗೆ ಮುಂದಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ಪದಾಧಿಕಾರಿಗಳು ಶುಕ್ರವಾರ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಅತ್ಯಾಚಾರಿಗಳ ವಿರುದ್ಧ ತನಿಖೆ ಕೈಗೊಳ್ಳುವ ಬದಲಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ, ರಾತ್ರಿ ಹೊತ್ತು ಯುವತಿ ಕೃತ್ಯ ನಡೆದ ಸ್ಥಳಕ್ಕೆ ಹೋಗಬಾರದಿತ್ತು. ಕಾಂಗ್ರೆಸ್ನವರು ನನ್ನ ಮೇಲೆಯೇ ಅತ್ಯಾಚಾರ ನಡೆಸುತ್ತಿದ್ದಾರೆ ಎಂದು ಅಸಂಬದ್ಧ ಹೇಳಿಕೆ ನೀಡಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವ್ಥೆ ಹದಗೆಟ್ಟಿದ್ದು, ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.
ಅತ್ಯಾಚಾರಿಗಳನ್ನು ಶೀಘ್ರ ಬಂಧಿಸಿ ಯುವತಿಗೆ ನ್ಯಾಯ ಕೊಡಿಸಬೇಕು. ಗೃಹ ಸಚಿವರು ರಾಜೀನಾಮೆ ನೀಡಬೇಕು. ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪ್ರತ್ಯೇಕ ಸಮಿತಿ ರಚಿಸಬೇಕು. ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸೂಕ್ತ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಗೊಂಡಬಾಳ, ಸಾವಿತ್ರಿ ಮುಜುಂದಾರ, ಶಕುಂತಲಾ ಹುಡೇಜಾಲಿ, ಚನ್ನಮ್ಮ ಮುಳಗುಂದ, ಶೀಲಾ ಹಾಲ್ಕುರುಕಿ, ಸವಿತಾ ಗೋರಂಟ್ಲಿ, ನೂರಜಹಾನ್ ಬೇಗಂ, ನಗರಸಭೆ ಸದಸ್ಯರಾದ ಅಕ್ಬರ್ ಪಾಷಾ ಪಲ್ಟನ್, ಬಸಯ್ಯ ಹಿರೇಮಠ, ಮುಖಂಡರಾದ ಮಂಜುನಾಥ ಗೊಂಡಬಾಳ, ನವೀನ್ ಇತರರಿದ್ದರು.