ಕೊಪ್ಪಳ: ಜಿಲ್ಲೆಯಲ್ಲಿನ ಬಹುಗ್ರಾಮ ಕುಡಿವ ನೀರು ಕಾಮಗಾರಿಗಳನ್ನು ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಪಂ ಸಿಇಒ ಫೌಜಿಯಾ ತರನ್ನುಮ್, ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಪಂ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದರು. ಕುಷ್ಟಗಿ, ಯಲಬುರ್ಗಾ ಹಾಗೂ ಕುಕನೂರು ತಾಲೂಕುಗಳ 331 ಗ್ರಾಮಗಳಿಗೆ ಡಿಬಿಒಟಿ ಆಧಾರದಲ್ಲಿ ಕುಡಿವ ನೀರು ಪೂರೈಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ನವೆಂಬರ್ ತಿಂಗಳೊಳಗೆ ಯೋಜನೆ ಪೂರ್ಣಗೊಳಿಸಬೇಕು. ಯೋಜನೆ ಬಗ್ಗೆ ಆಯಾ ಗ್ರಾಪಂ ಮಟ್ಟದಲ್ಲಿ ಜನರಿಗೆ ಮಾಹಿತಿ ನೀಡಬೇಕು. ನೀರಗಂಟಿಗಳಿಗೆ ಕಾರ್ಯಾಗಾರ ಏರ್ಪಡಿಸಿ ಯೋಜನೆ ಮಾಹಿತಿ ತಿಳಿಸಬೇಕು. ಸಮರ್ಪಕವಾಗಿ ಕುಡಿವ ನೀರು ಪೂರೈಸುವಂತೆ ನೋಡಿಕೊಳ್ಳಬೇಕು. ಶುದ್ಧ ಕುಡಿವ ನೀರಿನ ಘಟಕಗಳನ್ನು ಸರಿಯಾಗಿ ನಿರ್ವಹಿಸಬೇಕು. ಕೆಟ್ಟ ತಕ್ಷಣ ರಿಪೇರಿ ಮಾಡಿಸಿ ನೀರೊದಗಿಸಬೇಕು. ಇನ್ನುಳಿದ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಮುಗಿಸಬೇಕು. ಅನಗತ್ಯ ವಿಳಂಬಕ್ಕೆ ಅವಕಾಶ ನೀಡಬೇಡಿ ಎಂದು ತಾಕೀತು ಮಾಡಿದರು.
ಜಿಪಂ ಉಪ ಕಾರ್ಯದರ್ಶಿ ಸಮೀರ್ ಮುಲ್ಲಾ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ವಿಭಾಗದ ಇಇ ಬಸನಗೌಡ ಮೇಟಿಪಾಟೀಲ, ಕುಷ್ಟಗಿ, ಯಲಬುರ್ಗಾ ಉಪ ವಿಭಾಗದ ಅಧಿಕಾರಿಗಳಿದ್ದರು.