More

    ಅಂಜನಾದ್ರಿಯಲ್ಲಿ ಬಾಬಾಗೆ ಧಾರ್ಮಿಕ ಕಾರ್ಯಕ್ರಮ ನಡೆಸಲು ಅವಕಾಶ ನೀಡಿ: ಶ್ರೀರಾಮ ಸೇನೆ ವಿಭಾಗೀಯ ಅಧ್ಯಕ್ಷ ಸಂಜೀವ ಮರಡಿ ಒತ್ತಾಯ

    ಕೊಪ್ಪಳ: ಗಂಗಾವತಿ ತಾಲೂಕಿನ ಅಂಜನಾದ್ರಿಯ ಐತಿಹಾಸಿಕ ಆಂಜನೇಯ ದೇವಾಲಯದಲ್ಲಿ ವಿದ್ಯಾದಾಸ್ ಬಾಬಾಗೆ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ. ಆದರೆ, ಜಿಲ್ಲಾಡಳಿತ ಅದಕ್ಕೆ ಅವಕಾಶ ಕಲ್ಪಿಸುತ್ತಿಲ್ಲ. ಕೂಡಲೇ ಅವಕಾಶ ನೀಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದೆಂದು ಶ್ರೀರಾಮ ಸೇನೆ ವಿಭಾಗೀಯ ಅಧ್ಯಕ್ಷ ಸಂಜೀವ ಮರಡಿ ತಿಳಿಸಿದರು.

    ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 40 ವರ್ಷದಿಂದ ಬಾಬಾ, ಅಂಜನಾದ್ರಿ ಬೆಟ್ಟದಲ್ಲಿ ಪೂಜೆ, ರಾಮಾಯಣ ಪಠಣ, ಸಂಸ್ಕೃತ ಪಾಠಶಾಲೆ ಸೇರಿ ಧಾರ್ಮಿಕ ಕಾರ್ಯಕ್ರಮ ನಡೆಸುತ್ತಿದ್ದಾರೆ. ಕಳೆದ 3 ವರ್ಷಗಳ ಹಿಂದೆ ಮುಜರಾಯಿ ಇಲಾಖೆ ದೇವಸ್ಥಾನವನ್ನು ವಶಕ್ಕೆ ಪಡೆದಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ. ಬೆಳಗ್ಗೆ 6ರಿಂದ ರಾತ್ರಿ 9ಗಂಟೆವರೆಗೆ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ. ಆದರೆ, ಕಂದಾಯ ನಿರೀಕ್ಷಕ ಮಂಜುನಾಥ ಹಾಗೂ ತಾಲೂಕಾಡಳಿತ ಅದಕ್ಕೆ ಅವಕಾಶ ನೀಡುತ್ತಿಲ್ಲ. ಕೂಡಲೇ ಸಮಸ್ಯೆ ಸರಿಪಡಿಸಬೇಕು. ಇಲ್ಲದಿದ್ದರೆ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ ನೇತೃತ್ವದಲ್ಲಿ ಜಿಲ್ಲಾಡಳಿತ ಭವನ ಮುಂದೆ ಧರಣಿ ನಡೆಸುತ್ತೇವೆಂದು ಎಚ್ಚರಿಸಿದರು.

    ವಿದ್ಯಾದಾಸ್ ಬಾಬಾ ಮಾತನಾಡಿ, ಮೊದಲು ಅಂಜನಾದ್ರಿ ಬೆಟ್ಟದ ಬಗ್ಗೆ ಅಷ್ಟಾಗಿ ಜನರಿಗೆ ತಿಳಿದಿರಲಿಲ್ಲ. ನಾನು ಪೂಜೆ ನಡೆಸುತ್ತ ಬಂದಿದ್ದೇನೆ. ಇತ್ತೀಚಿನ ದಿನಗಳಲ್ಲಿ ಪ್ರಚಾರ ಹೆಚ್ಚಿ, ಅಂತಾರಾಷ್ಟ್ರೀಯ ಖ್ಯಾತಿ ಪಡೆದಿದೆ. ಹಣವೂ ಹರಿದು ಬರುತ್ತಿದೆ. ಹೀಗಾಗಿ ಸ್ಥಳೀಯ ರಾಜಕೀಯ ನಾಯಕರು ನನ್ನನ್ನು ಹೊರಹಾಕಲು ಯತ್ನಿಸಿದರು. ಆದರೆ, ನ್ಯಾಯಾಲಯ ನನಗೆ ಪೂಜೆಗೆ ಅವಕಾಶ ನೀಡಿದೆ. ಜಿಲ್ಲಾಡಳಿತ ಸುಳ್ಳು ಹೇಳಿ ಜನಪ್ರತಿನಿಧಿಗಳು, ಜನರ ದಿಕ್ಕು ತಪ್ಪಿಸುತ್ತಿದೆ. ಇಲ್ಲಸಲ್ಲದ ಆರೋಪಗಳನ್ನು ನನ್ನ ಮೇಲೆ ಹೇರಲು ಯತ್ನಿಸುತ್ತಿದೆ. ನಿಯಮದಂತೆ ನನಗೆ ಅವಕಾಶ ಕಲ್ಪಿಸಬೇಕು ಎಂದರು. ಮುಖಂಡ ಜೆ.ಪಿ.ನಾರಾಯಣಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts