ಕೊಪ್ಪಳ: ಕಾನೂನು ಅರಿವು ನೆರವು ಕಾರ್ಯಕ್ರಮಗಳನ್ನು ಇಲಾಖಾವಾರು ಅಚ್ಚುಕಟ್ಟಾಗಿ ರೂಪಿಸಬೇಕು ಎಂದು ಅಧಿಕಾರಿಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ್ವೈಮಾಸಿಕ ಸಭೆ ನಿಮಿತ್ತ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗಿನ ವಿಡಿಯೋ ಸಂವಾದದಲ್ಲಿ ಶುಕ್ರವಾರ ಮಾತನಾಡಿದರು. ಸೆ.1ರಂದು ವಿಶ್ವ ಪೌಷ್ಟಿಕ ದಿನಾಚರಣೆ ನಿಮಿತ್ತ ಜಿಲ್ಲೆಯಲ್ಲಿ ತೀವ್ರವಾಗಿ ಅಪೌಷ್ಟಿಕದಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ, ಅವರಿಗೆ ಸೂಕ್ತ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರ ವಿತರಿಸಬೇಕು. ಅಲ್ಲದೆ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಆಯೋಜಿಸಿ ಮಕ್ಕಳ ಪೌಷ್ಟಿಕ ಬೆಳವಣಿಗೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕ್ರಮವಹಿಸಬೇಕು.
ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆ ಆಗಿದ್ದಲ್ಲಿ ಪರಿಶೀಲಿಸಿ, ಅವರ ಶೈಕ್ಷಣಿಕ ಹಿತದೃಷ್ಟಿಯಿಂದ ಮಾಸಿಕ ಸಹಾಯಧನ ನೀಡಬೇಕು. ಅ.1ರಂದು ಹಿರಿಯ ನಾಗರಿಕರ ದಿನ ಆಚರಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನ್ಯಾಯಾಧೀಶ ದೇವೇಂದ್ರ ಪಂಡಿತ್ ಸೂಚನೆ ನೀಡಿದರು.
ಮಾನಸಿಕ ಆರೋಗ್ಯ ದಿನ ನಿಮಿತ್ತ ಅ.10ರಂದು ಆರೋಗ್ಯ ಇಲಾಖೆ ಮಾನಸಿಕ ಆರೋಗ್ಯ ರಕ್ಷಣೆ ಕಾರ್ಯಕ್ರಮ ಮತ್ತು ಕಾನೂನು ಅರಿವು ಕಾರ್ಯಾಗಾರ ನಡೆಸಬೇಕು. ನ.12 ರಂದು ರಾಷ್ಟ್ರೀಯ ಲೋಕ್ ಅದಾಲತ್ನಲ್ಲಿ ರಾಜಿ ಆಗಬಹುದಾದ ಸಿವಿಲ್, ಕ್ರಿಮಿನಲ್ ಕೇಸ್ ಮತ್ತು ವ್ಯಾಜ್ಯ ಪೂರ್ವ ಪ್ರಕರಣ ಮತ್ತು ಇತರೆ ಇನ್ಶೂರೆನ್ಸ್ ಕಂಪನಿಗೆ ಸಂಬಂಧಪಟ್ಟ ಪ್ರಕರಣ ಇತ್ಯರ್ಥಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸಹಕರಿಸಬೇಕು ಎಂದು ಹೇಳಿದರು.