ಬೆಂಗಳೂರು: ರಾಜಧಾನಿಯಲ್ಲಿ ಆತಂಕ ಮೂಡಿಸಿದ್ದ, ರಾಜ್ಯದಲ್ಲೇ ಒಂದು ರೀತಿಯಲ್ಲಿ ಸಂಚಲನ ಸೃಷ್ಟಿಸಿದ್ದ ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಗಲಭೆಯ ಆರೋಪಿಯೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವೇದಿಕೆ ಹಂಚಿಕೊಳ್ಳುವ ಮೂಲಕ ಹಲವರು ಹುಬ್ಬೇರಿಸಿ ನೋಡುವಂತೆ ಮಾಡಿದ್ದಾರೆ.
ಬೆಂಗಳೂರು ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಗುರುವಾರ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಇಂಥದ್ದೊಂದು ಸನ್ನಿವೇಶ ಕಂಡುಬಂದಿದೆ. ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಜೈಲು ಸೇರಿದ್ದ ಮಾಜಿ ಮೇಯರ್ ಸಂಪತ್ ರಾಜ್ ಈ ಕಾರ್ಯಕ್ರಮದಲ್ಲಿ ಅದೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆಯಲ್ಲೇ ಕಾಣಿಸಿಕೊಂಡಿದ್ದು, ಅನೇಕರ ಪಾಲಿಗೆ ಅಚ್ಚರಿ ಉಂಟು ಮಾಡಿದೆ.
ಈ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಧ್ವಂಸಗೊಂಡಿದ್ದು, ಈ ಸಂಬಂಧ ಸಂಪತ್ ರಾಜ್ ಅವರನ್ನು ಕಾಂಗ್ರೆಸ್ ಪಕ್ಷದಿಂದಲೇ ಉಚ್ಚಾಟನೆ ಮಾಡಬೇಕು ಎಂಬುದಾಗಿ ಅಖಂಡ ಶ್ರೀನಿವಾಸಮೂರ್ತಿ ಒತ್ತಾಯಿಸುತ್ತ ಬಂದಿದ್ದಾರೆ. ಮತ್ತೊಂದೆಡೆ ಜೈಲುಪಾಲಾಗಿ ಹೊರಬಂದ ಬಳಿಕ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವಿದ್ದ ಸಂಪತ್ರಾಜ್ ಈ ಕಾರ್ಯಕ್ರಮಕ್ಕೆ ಇದ್ದಕ್ಕಿದ್ದಂತೆ ಹಾಜರಾಗಿದ್ದರು. ಮಾತ್ರವಲ್ಲ, ಡಿ.ಕೆ. ಶಿವಕುಮಾರ್ ಹಾಗೂ ಸಂಪತ್ ರಾಜ್ ಜತೆಯಾಗಿ ಕಾಣಿಸಿಕೊಂಡು ಒಟ್ಟಿಗೇ ದೀಪ ಬೆಳಗಿಸಿದ್ದು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.