ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿಯಾದ ನನ್ನ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿ ಹಬ್ಬಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮಂಗಳವಾರ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.
ನಾನು ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಬೆಂಬಲಿಸುತ್ತಿದ್ದೇಎ ಎಂದು ಸಾಮಾಜಿಕ ಜಾಲತಾಣದಲ್ಲಿ ಯಾರೋ ಪೋಸ್ಟ್ ಮಾಡಿ ನನ್ನ ಬೆಂಬಲಿಗರು ಹಾಗೂ ಮತದಾರರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ.
ನಾನು ಬಿಜೆಪಿಯಲ್ಲಿದ್ದ ಸಂದರ್ಭದಲ್ಲಿ ಹೇಳಿದ್ದ ಹೇಳಿಕೆಯನ್ನು ಈಗ ಹೇಳಿದ್ದೇನೆ ಎಂಬಂತೆ ಚಿತ್ರಿಸಲಾಗಿದೆ. ವಾಟ್ಸಪ್ ಹಾಗೂ ಫೇಸ್ ಬುಕ್ಗಳಲ್ಲಿ ಈ ರೀತಿಯಾಗಿ ಫೋಸ್ಟ್ ಮಾಡಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಇದು ನನ್ನ ವಿರುದ್ಧ ರೂಪಿಸಿರುವ ಷಡ್ಯಂತ್ರವಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್, ಪ್ರಮುಖರಾದ ಮೋಹನ್, ಉಮೇಶ್ ಆರಾಧ್ಯ ಉಪಸ್ಥಿತರಿದ್ದರು.