ಮಂಡ್ಯ: ಕೆ.ಆರ್.ಪೇಟೆ ತಾಲೂಕು ಅಂಬಿಗರಗಳ್ಳಿ ಸಂಗಾಪುರದ ಕಾವೇರಿ ನದಿ ಸಮೀಪ ಅ.14, 15 ಮತ್ತು 16 ರಂದು ನಡೆಯಲಿರುವ ಮಹಾಕುಂಭಮೇಳಕ್ಕೆ ರಾಜ್ಯಸಭಾ ಸದಸ್ಯರು ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಗಿದೆ.
ಜಿಲ್ಲಾಧಿಕಾರಿ ಎಸ್.ಅಶ್ವಥಿ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಅವರು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನದ ಜತೆಗೆ ಕ್ರೀಡಾ ಸಚಿವರೂ ಆದ ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡ ಅವರು ಬರೆದಿದ್ದ ಆಹ್ವಾನದ ಪತ್ರವನ್ನು ಸಲ್ಲಿಸಿದ್ದಾರೆ.
ಕುಂಭಮೇಳಕ್ಕೆ ಸಂಬಂಧಿಸಿದಂತೆ ಸಚಿವ ಕೆಸಿಎನ್, ಡಾ.ವೀರೇಂದ್ರ ಹೆಗ್ಗಡೆ ಅವರಿಗೆ ಆಹ್ವಾನದ ಪತ್ರ ಬರೆದಿದ್ದಾರೆ. ಅದರಂತೆ 2013ರಲ್ಲಿ ಆದಿಚುಂಚನಗಿರಿ ಶ್ರೀಗಳು, ಸುತ್ತೂರು ಶ್ರೀಗಳು ಮತ್ತು ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಕುಂಭಮೇಳ ಆಯೋಜಿಸಲಾಗಿತ್ತು. ರಾಷ್ಟ್ರಮಟ್ಟದಲ್ಲಿ ಈ ಕ್ಷೇತ್ರವು ಖ್ಯಾತಿ ಪಡೆದಿದೆ. ಈ ಕ್ಷೇತ್ರವು ಕಾವೇರಿ ಪ್ರವಾಸೋದ್ಯಮ ಕ್ಷೇತ್ರವೆಂದು ಸಹ ಗುರುತಿಸಲ್ಪಟ್ಟಿದೆ. ಇದಲ್ಲದೆ ಮಲೈ ಮಹದೇಶ್ವರ ದೇವಸ್ಥಾನ ನಿರ್ಮಾಣಗೊಂಡಿದ್ದು, ಲೋಕಾರ್ಪಣೆಗೆ ಸಿದ್ಧವಾಗಿದೆ. ಈ ಪುಣ್ಯ ಸ್ಥಳದಲ್ಲಿ ಮೂರು ದಿನ ಮಲೈ ಮಹದೇಶ್ವರ ಜಯಂತಿ ಮಹೋತ್ಸವ ಮತ್ತು ಮಹಾಕುಂಭಮೇಳ ಪುಣ್ಯ ಸ್ನಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಸರ್ವಧರ್ಮ ಸಮ್ಮೇಳನ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಜಾನಪದ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜಿಲ್ಲಾ ಉತ್ಸವ ನಡೆಯಲಿದೆ. ದೇಶದ ವಿವಿಧ ಭಾಗಗಳಿಂದ ಸರ್ವಧರ್ಮಗಳ ಗುರುಗಳು ಹಾಗೂ ಸುಮಾರು 3 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಲಿದ್ದಾರೆ. ಅಂತೆಯೇ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ. ಆದ್ದರಿಂದ ಈ ಐತಿಹಾಸಿಕ ಕುಂಭಮೇಳದಲ್ಲಿ ಒಂದು ದಿನದ ಧಾರ್ಮಿಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿಕೊಡಬೇಕೆಂಬುದು ಮನವಿ ಮಾಡಿದ್ದಾರೆ.