ಶಿವಮೊಗ್ಗ: ಸಹ್ಯಾದ್ರಿ ಕಾಲೇಜು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕನಿಷ್ಠ ಅರ್ಹತಾ ಅಂಕಗಳಿಗಿಂತಲೂ ಕಡಿಮೆ ಅಂಕ ನೀಡಿದ್ದು, ಮರುಮೌಲ್ಯಮಾಪನಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಎನ್ಎಸ್ಯುಐ ನೇತೃತ್ವದಲ್ಲಿ ಸೋಮವಾರ ವಿದ್ಯಾರ್ಥಿಗಳು ಕುವೆಂಪು ವಿವಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ 2022-23ನೇ ಸಾಲಿನ ಪ್ರಥಮ ಸೆಮಿಸ್ಟರ್ ಪರೀಕ್ಷೆ ಮೌಲ್ಯಮಾಪನದಲ್ಲಿ ಲೋಪವಾಗಿರುವ ಅನುಮಾನ ವ್ಯಕ್ತವಾಗಿದೆ. ಭದ್ರಾವತಿ ಹಾಗೂ ಕಡೂರು ಕಾಲೇಜಿನ ಸ್ನಾತಕೋತ್ತರ ಕೇಂದ್ರದ 24 ವಿದ್ಯಾರ್ಥಿಗಳಿಗೆ ಇದರಿಂದ ಅನ್ಯಾಯವಾಗಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ಶೇ.55ಕ್ಕಿಂತ ಕಡಿಮೆ ಅಂಕಗಳನ್ನು ನೀಡಲಾಗಿದೆ. ಎನ್ಇಟಿ ಮತ್ತು ಸ್ಲೆಟ್ ಪರೀಕ್ಷೆ ಎದುರಿಸಲು ಸ್ನಾತಕ್ಕೋತ್ತರ ಪದವಿಯಲ್ಲಿ ಶೇ.55ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುವುದು ಕಡ್ಡಾಯವಾಗಿದೆ. ಆದರೆ ಈಗ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯುವ ಅರ್ಹತೆಯನ್ನೇ ಕಳೆದುಕೊಂಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ತೊಂದರೆ ಅನುಭವಿಸುತ್ತಿರುವ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಗ್ರಾಮೀಣ, ಬಡ, ಹಿಂದುಳಿದ ಹಾಗೂ ಪರಿಶಿಷ್ಟ ಜಾತಿ ವರ್ಗಗಳಿಗೆ ಸೇರಿದವರಾಗಿದ್ದು, ಕನಿಷ್ಠ ಅರ್ಹತೆಯ ಅಂಕಗಳಿಗಿಂತ ಕಡಿಮೆ ಅಂಕಗಳು ಬಂದಿರುವುದರಿಂದ ಭವಿಷ್ಯದಲ್ಲಿ ಉದ್ಯೋಗಾವಕಾಶಗಳಿಂದ ವಂಚಿತರಾಗಲಿದ್ದಾರೆ ಎಂದು ತಿಳಿಸಿದರು.
ಸಹ್ಯಾದ್ರಿ ಕಲಾ ಕಾಲೇಜಿನ ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಸಂಶೋಧನಾ ಕೇಂದ್ರದಲ್ಲಿ ಸಂಶೋಧನೆ ಕೈಗೊಂಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಪಿಎಚ್ಡಿ ಕೋರ್ಸ್ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸಲಾಗಿದೆ. ಅವರ ಉತ್ತರ ಪತ್ರಿಕೆಗಳನ್ನೂ ಮರು ಮೌಲ್ಯಮಾಪನ ಮಾಡಿಸುವ ಮೂಲಕ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು