ಮೂಡಿಗೆರೆ: ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರವು ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದ ಪ್ರಗತಿಪರ ರೈತ ಮಹಿಳೆ ಜ್ಯೋತಿ ಚಂದ್ರಶೇಖರ್ ಅವರ ಜಮೀನಿನಲ್ಲಿ ಶುಕ್ರವಾರ ಅಂಗಾಂಶ ಏಲಕ್ಕಿ ಬಾಳೆ ಕ್ಷೇತ್ರೋತ್ಸವ ನಡೆಸಿತು.
ಕೆವಿಕೆ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಟಿ.ಎ.ಕೃಷ್ಣಮೂರ್ತಿ ಮಾತನಾಡಿ, ಮಲೆನಾಡ ಭಾಗದಲ್ಲಿ ರೈತರು ಮುಖ್ಯ ಬೆಳೆಗಳಾದ ಕಾಫಿ, ಮೆಣಸು, ಅಡಕೆಗಳ ಜತೆಗೆ ಭತ್ತ ಬೆಳೆಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಭತ್ತದ ಗದ್ದೆಗಳನ್ನು ಪಾಳು ಬಿಡುತ್ತಿದ್ದಾರೆ. ಇದನ್ನು ನಮ್ಮ ಇಲಾಖೆ ಗಮನಿಸಿ ಅಂತಹ ಗದ್ದೆಗಳಿಗೆ ಅಂಗಾಂಶ ಏಲಕ್ಕಿ ಬಾಳೆ ಬೆಳೆಯುವ ಬಗ್ಗೆ ರೈತರಿಗೆ ಅರಿವು ಮೂಡಿಸಿ, ಆರ್ಥಿಕ ಕ್ಷಮತೆ ಹೆಚ್ಚಿಸಿಕೊಳ್ಳಲು ಕ್ಷೇತ್ರೋತ್ಸವ ಕಾರ್ಯಕ್ರಮ ಏರ್ಪಡಿಸಿದೆ ಎಂದು ಹೇಳಿದರು.
ಅಂಗಾಂಶ ಏಲಕ್ಕಿ ಬೆಳೆ ಇಲ್ಲಿನ ಹವಾಗುಣಕ್ಕೆ ಸೂಕ್ತವಾಗಿದ್ದು, ಹೆಚ್ಚಿನ ಇಳುವರಿ ಪಡೆಯುವ ಮೂಲಕ ರೈತರು ಆರ್ಥಿಕವಾಗಿ ಸಬಲಗೊಳ್ಳಲು ಸಹಕಾರಿಯಾಗಿದೆ. ಹಾಗಾಗಿ ರೈತರು ಕೃಷಿ ವಿಜ್ಞಾನ ಕೇಂದ್ರ ನೀಡುವ ತಂತ್ರಜ್ಞಾನವನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳುವ ಜತೆಗೆ ಸಮಗ್ರ ಕೃಷಿ ಪದ್ಧತಿಯ ಕಡೆ ಗಮನ ಹರಿಸಬೇಕು ಎಂದು ಹೇಳಿದರು.
ತೋಟಗಾರಿಕಾ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಯಲ್ಲೇಶ್ಕುಮಾರ್ ಅಂಗಾಂಶ ಬಾಳೆ ಕೃಷಿ ಸಮಗ್ರ ಬೆಳೆ ನಿರ್ವಹಣೆ ಕುರಿತು ತಾಂತ್ರಿಕ ಮಾಹಿತಿ ನೀಡಿದರು.