ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಲಲಿತಾ ಲೋಕೇಶ್ ಬುಧವಾರ ಅವಿರೋಧವಾಗಿ ಆಯ್ಕೆಯಾದರು.
ಗ್ರಾಪಂ ಸಭಾಂಗಣದಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಲಲಿತಾ ಲೋಕೇಶ್ ಹೊರತುಪಡಿಸಿ ಬೇರ್ಯಾವ ಅಭ್ಯರ್ಥಿಗಳೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಬಿಇಒ ಎಚ್.ಸಿ.ರವೀಶ್ ಅವಿರೋಧ ಆಯ್ಕೆ ಘೋಷಿಸಿದರು.
ಸದಸ್ಯರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷೆ ಲಲಿತಾ ಲೋಕೇಶ್, ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮಗಳಿಗೆ ಕುಂದುಕೊರತೆಯಾಗದಂತೆ ಎಲ್ಲ ಸದಸ್ಯರ ಸಹಕಾರ ಪಡೆದು ಕಾರ್ಯನಿರ್ವಹಿಸಲಾಗುವುದು. ಗ್ರಾಮಸ್ಥರ ಮೂಲಸೌಕರ್ಯಗಳ ಸಮಸ್ಯೆ ಪರಿಹಾರಕ್ಕೆ ಹೆಚ್ಚು ಆದ್ಯತೆ ನೀಡಲಾಗವುದು ಎಂದು ತಿಳಿಸಿದರು.
ನಿಕಟಪೂರ್ವ ಅಧ್ಯಕ್ಷೆ ಸುನೀತಾ ಸ್ವಾಮಿ ಮಾತನಾಡಿ, ಗ್ರಾಮಗಳ ಅಭಿವೃದ್ಧಿಗೆ ಇನ್ನಷ್ಟು ಕೆಲಸಗಳು ಬಾಕಿಯಿರುವ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರು ಸಮರ್ಪಕವಾಗಿ ಕಾರ್ಯನಿರ್ವಹಿಸುವ ವಿಶ್ವಾಸವಿದೆ. ನನ್ನ ಅವಧಿಯಲ್ಲಿ ಗ್ರಾಮಸ್ಥರಿಗೆ ಅನೇಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು.
ಗ್ರಾಪಂ ಉಪಾಧ್ಯಕ್ಷೆ ಪುಟ್ಟಮ್ಮ, ಸದಸ್ಯರಾದ ಪಲ್ಲವಿ, ಪ್ರೇಮಾ, ಸತೀಶ್, ರವಿಕುಮಾರ್, ಸಂದೀಪ್, ತಮ್ಮೇಗೌಡ, ಕಾವ್ಯಾ, ದಿಲೀಪ್, ದಿನೇಶ್, ಬಿಜೆಪಿ ಮುಖಂಡರಾದ ಶಿವರಾಜ್, ಎಂ.ಎಸ್.ಪುನೀತ್, ಎಂ.ಜಿ.ಪ್ರಕಾಶ್, ಸುನೀಲ್ ಮತ್ತಿತರರಿದ್ದರು.