More

    ಜಮೀನು ಹಸ್ತಾಂತರ ಸಮಸ್ಯೆ ಪರಿಹರಿಸಿ

    ಬೆಳಗಾವಿ: ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿಗೆ ಅಡ್ಡಿಯಾಗಿರುವ ಖಾಸಗಿ ಆಸ್ತಿಗಳ ಸ್ವಾಧೀನ ಮತ್ತು ರಕ್ಷಣಾ ಇಲಾಖೆ ಜಮೀನು ಹಸ್ತಾಂತರ ಸೇರಿದಂತೆ ಎಲ್ಲ ಬಗೆಯ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಕೇಂದ್ರ ರೈಲ್ವೆ ಇಲಾಖೆ ರಾಜ್ಯ ಸಚಿವ ಸುರೇಶ ಅಂಗಡಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ, ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಕಿಡಿಕಾರಿದರು.

    ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಕೆಲವು ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕೆಲ ಕಾಮಗಾರಿ ವ್ಯಾಪ್ತಿಯಲ್ಲಿ ಬರುವ ಖಾಸಗಿ ಆಸ್ತಿಗಳ ಮೌಲ್ಯಮಾಪನ ಮಾಡಿ ಮರು ವಸತಿ ಅಥವಾ ಸ್ಥಳಾಂತರ ಬಗ್ಗೆ ವರದಿ ನೀಡಿದರೆ ರಾಜ್ಯ ಸರ್ಕಾರದ ಜತೆ ಚರ್ಚಿಸಿ ಅಗತ್ಯ ಅನುದಾನ ಪಡೆಯಲಾಗುವುದು ಎಂದರು.

    ಜಮೀನು ಹಸ್ತಾಂತರಕ್ಕೆ ಸಂಬಂಧಿಸಿದಂತೆ ರಕ್ಷಣಾ ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ ಶೀಘ್ರ ಅನುಮೋದನೆ ಪಡೆಯಲು ಪ್ರಯತ್ನಿಸಲಾಗುವುದು. ಬೆಳಗಾವಿ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 30 ವರ್ಷ ಗಮನದಲ್ಲಿಟ್ಟುಕೊಂಡು ಅಗತ್ಯ ಸೌಲಭ್ಯ ಒದಗಿಸಲು, ಕಾಮಗಾರಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದರು.

    ಎಂಎಲ್‌ಐಆರ್‌ಸಿಯ ಬ್ರಿಗೇಡಿಯರ್ ಚೌಧರಿ ಮಾತನಾಡಿ, ಬಸ್ ನಿಲ್ದಾಣಕ್ಕೆ ಜಮೀನ ಹಸ್ತಾಂತರಿಸುವುದಕ್ಕೆ ಸಂಬಂಧಿಸಿದ ಪ್ರಸ್ತಾವ ರಕ್ಷಣಾ ಇಲಾಖೆಗೆ ಕಳುಹಿಸಲಾಗಿದ್ದು, ಅನುಮೋದನೆ ದೊರೆಯಬೇಕಿದೆ. ಸಾರ್ವಜನಿಕರಿಗೆ ಉತ್ತಮ ಸೌಕರ್ಯ ಒದಗಿಸುವುದಕ್ಕೆ ಅನುಕೂಲವಾಗುವಂತೆ ಪ್ರಸ್ತಾವಣೆ ಸಿದ್ಧಪಡಿಸಲಾಗುವುದು. ಬಸ್ ನಿಲ್ದಾಣದ ಜಮೀನು ಹಸ್ತಾಂತರ ಹೊರತುಪಡಿಸಿದರೆ ಇದುವರೆಗೆ ರಾಜ್ಯ ಸರ್ಕಾರಕ್ಕೆ ಕಳಿಸಿದ ಯಾವುದೇ ಪ್ರಸ್ತಾವನೆ ಬಾಕಿ ಉಳಿದಿಲ್ಲ ಎಂದು ಸ್ಪಷ್ಟಪಡಿಸಿದರು.

    ಶಾಸಕ ಅಭಯ ಪಾಟೀಲ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪಾಲಿಕೆ ಆಯುಕ್ತ ಜಗದೀಶ್, ಎಸಿ ಅಶೋಕ ತೇಲಿ, ಸ್ಮಾರ್ಟ್‌ಸಿಟಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದ್ದರು.

    ಸಮಗ್ರ ವರದಿ ಸಲ್ಲಿಸಲು ಡಿಸಿ ಸೂಚನೆ

    ಸ್ಮಾರ್ಟ್ ಸಿಟಿ ಕಾಮಗಾರಿ ವ್ಯಾಪ್ತಿಯಲ್ಲಿ ಬರುವ ಖಾಸಗಿ ಆಸ್ತಿದಾರರ ಪುನರ್ವಸತಿ ಮತ್ತು ಸ್ಥಳಾಂತರ ಕುರಿತು ಸಮಗ್ರ ವರದಿಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಲ್ಲಿಸಬೇಕು. ರಾಯಚೂರು-ಬಾಚಿ ರಸ್ತೆ (ಎಸ್.ಎಚ್- 20) ಗಾಂಧಿ ನಗರದಿಂದ ಅಶೋಕ ವೃತ್ತದವರೆಗೆ ರಸ್ತೆ ನಿರ್ಮಾಣ, ಸಂಚಯನಿ ವೃತ್ತದಿಂದ ಮೀನು ಮಾರ್ಕೆಟ್‌ವರೆಗೆ ಸ್ಮಾರ್ಟ್ ಸಿಟಿ ರಸ್ತೆ ನಿರ್ಮಾಣ ಕೈಗೊಳ್ಳುವ ಕುರಿತು ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ ನೀಡಿದರು.

    ಸ್ಮಾರ್ಟ್‌ಸಿಟಿ ಕಾಮಗಾರಿ ಚುರುಕುಗೊಳಿಸಲು ತ್ವರಿತವಾಗಿ ಅಗತ್ಯ ಕ್ರಮ ತೆಗೆದುಕೊಳ್ಳಿ. ಕಾರಣ ಮುಂದಿಟ್ಟುಕೊಂಡು ವಿಳಂಬ ಮಾಡುವುದು ಸರಿಯಲ್ಲ. ನಿಗದಿತ ಸಮಯದೊಳಗೆ ಕೆಲಸ ಪೂರ್ಣಗೊಳಿಸಬೇಕು.
    | ರಮೇಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts