ಬೆಳಗಾವಿ: ಕಲೆ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯಕ್ರಮಗಳನ್ನು ದಕ್ಷಿಣ ಕ್ಷೇತ್ರದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸಬೇಕು. ಕಾರ್ಯಕ್ರಮಗಳಿಗೆ ಅಗತ್ಯ ಆರ್ಥಿಕ ನೆರವು ನೀಡಲಾಗುವುದು ಎಂದು ಶಾಸಕ ಅಭಯ ಪಾಟೀಲ ಹೇಳಿದ್ದಾರೆ.
ಇಲ್ಲಿನ ವಡಗಾವಿಯ ಗಡಿಕನ್ನಡ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ಹಿರಿಯ ಕಲಾವಿದರ ಕಲೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಹಬ್ಬ ಸಾಂಸ್ಕೃತಿಕ ಸೌರಭ-2020 ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಸ್ಕೃತಿ ಮತ್ತು ಭಾಷೆ ಉಳಿಸುವ ನಿಟ್ಟಿನಲ್ಲಿ ಗಡಿಕನ್ನಡ ಭವನದ ಅಭಿವೃದ್ಧಿ ಸಂಬಂಧ ಶಾಸಕರ ನಿಧಿಯಿಂದ ಅನುದಾನ ಬಿಡುಗಡೆ ಮಾಡಲಾಗುವುದು. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿರುವ ಕಲಾವಿದರನ್ನು ಗುರುತಿಸಿ ಮುಖ್ಯವಾಹಿನಿಗೆ ತರುವ ಕಾರ್ಯ ಅವಶ್ಯವಾಗಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮಾತನಾಡಿ, ಕಲೆ ಮತ್ತು ಸಾಂಸ್ಕೃತಿಕ ಹಿರಿಮೆಯನ್ನು ಹೊಂದಿರುವ ಕರ್ನಾಟಕದ ಎಲ್ಲ ರೀತಿಯ ಕಲಾ ಪ್ರಕಾರಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸವನ್ನು ಇಲಾಖೆಯಿಂದ ಮಾಡಲಾಗುತ್ತಿದೆ ಎಂದರು.
ಶಹನಾಯಿ ವಾದನ, ಶಾಸ್ತ್ರೀಯ ಸಂಗೀತ, ಜನಪದ ಸಂಗೀತ, ಸುಗಮ ಸಂಗೀತ, ಸೋಬಾನೆ ಪದ, ಸುಗ್ಗಿ ಕುಣಿತ, ಡೊಳ್ಳು ಕುಣಿತ, ಭಜನಾಪದ, ನೃತ್ಯರೂಪಕ, ಸಮೂಹ ನೃತ್ಯ, ಸಾಮಾಜಿಕ ನಾಟಕ ಕಾರ್ಯಕ್ರಮಗಳನ್ನು ಕಲಾವಿದರು ನಡೆಸಿಕೊಟ್ಟರು. ಜಯಶ್ರೀ ಪಾಟೀಲ, ಮಂಗಲಾ ಮಠದ, ಜ್ಯೋತಿ ಬದಾಮಿ, ಶ್ರೀನಿವಾಸ ತಾಳೂರಕರ ಇತರರು ಇದ್ದರು.