ಮಳವಳ್ಳಿ: ತಾಲೂಕಿನ ಹಂಗ್ರಾಪುರ ಗ್ರಾಮದ ಜಮೀನೊಂದರಲ್ಲಿ ಗುರುವಾರ ಕಬ್ಬು ಕಟಾವು ಮಾಡುತ್ತಿದ್ದಾಗ ಎರಡು ಚಿರತೆ ಮರಿಗಳು ಪತ್ತೆಯಾಗಿದ್ದು, ಕಾರ್ಮಿಕರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿ ಶಿವರಾಜು ಹಾಗೂ ಸಿಬ್ಬಂದಿ, ಚಿರತೆ ಮರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಾಯಿ ಚಿರತೆ ಸುತ್ತಲಿನ ಪ್ರದೇಶದಲ್ಲೇ ಸಂಚರಿಸುತ್ತಿರುವ ಸಾಧ್ಯತೆ ಇರುವುದರಿಂದ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಹಲವು ತಿಂಗಳಿನಿಂದ ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡು ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ತಿಂದುಹಾಕಿದೆ. ಹಲವು ಬಾರಿ ಅರಣ್ಯಾಧಿಕಾರಿ ಗಮನಕ್ಕೆ ತಂದಿದ್ದರೂ ಇತ್ತ ತಲೆ ಹಾಕಿರಲಿಲ್ಲ ಎಂದು ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಚಿರತೆ ಮರಿಗಳು ಪತ್ತೆಯಾಗಿರುವುದರಿಂದ ರೈತರು ಜಮೀನುಗಳಿಗೆ ತೆರಳಲು ಭಯಭೀತರಾಗಿದ್ದಾರೆ.