ಎಚ್.ಡಿ.ಕೋಟೆ: ಸರಗೂರು ತಾಲೂಕಿನ ಹಲಸೂರು ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ 5 ವರ್ಷದ ಹೆಣ್ಣು ಚಿರತೆ ಸೆರೆಯಾಗಿದೆ.
ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿತ್ತು. ಅಲ್ಲದೆ ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಿತ್ತು. ಇದರಿಂದ ಆತಂಕಗೊಂಡಿದ್ದ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಕಳೆದ ವಾರ ಗ್ರಾಮದ ಶಂಭುಲಿಂಗನಾಯಕ ಎಂಬುವರ ಮನೆ ಸಮೀಪದ ಜಮೀನಿನಲ್ಲಿ ಬೋನು ಇಡಲಾಗಿತ್ತು. ಗುರುವಾರ ಬೆಳಗಿನ ಜಾವ ಬೋನಿಗೆ ಚಿರತೆ ಬಿದ್ದಿದೆ. ಇದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಬಂದ ಸರಗೂರು ಅರಣ್ಯ ವಲಯ ಅಧಿಕಾರಿ ಮಧು ಮತ್ತು ಸಿಬ್ಬಂದಿ ಚಿರತೆಯನ್ನು ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಮೂಲೆಹೊಳೆ ಪ್ರದೇಶದಲ್ಲಿ ಬಿಟ್ಟಿದ್ದಾರೆ.