ಅಜ್ಜಂಪುರ: ಪರಿಸರ ಮಾಲಿನ್ಯಕ್ಕೆ ಕಾರಣಗಳೇನು ಎಂಬುದನ್ನು ಪಟ್ಟಿ ಮಾಡುತ್ತಿದ್ದೇವೆಯೇ ಹೊರತು ರಕ್ಷಣಾ ಕ್ರಮಗಳ ಬಗ್ಗೆ ಚಿಂತಿಸುತ್ತಿಲ್ಲ. ಪ್ರಕೃತಿ ಸಂರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗಬೇಕು ಎಂದು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಜಿ.ಎಂ.ರಾಜಶೇಖರ್ ಹೇಳಿದರು.
ಅಜ್ಜಂಪುರ ತಾಲೂಕು ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಅರಣ್ಯ ಇಲಾಖೆ ಆಶ್ರಯದಲ್ಲಿ ಗಿಡ ನೆಟ್ಟು ಮಾತನಾಡಿದ ಅವರು, ನಮ್ಮ ಸ್ವಾರ್ಥ, ನಿರ್ಲಕ್ಷೃದಿಂದಾಗಿ ಎದುರಾಗಿರುವ ಪರಿಸರ ಸಂಬಂಧಿ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ನಾವೆಲ್ಲ ಒಟ್ಟಾಗಬೇಕು ಎಂದರು.
ಸಂಘದ ಚಟುವಟಿಕೆಯಲ್ಲಿ ಜಿಲ್ಲಾ ಸಂಘವು ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿವರ್ಷ 1000 ಗಿಡ ನೆಡುವ ಕಾರ್ಯಕ್ರಮ ಮಾಡುತ್ತ ಬಂದಿದೆ. ಈ ಬಾರಿ ನೂತನ ತಾಲೂಕು ಕೇಂದ್ರ ಅಜ್ಜಂಪುರದಲ್ಲಿ ಸಸಿ ನೆಡುವ ಮೂಲಕ ಪಟ್ಟಣವನ್ನು ಹಸಿರೀಕರಣ ಮಾಡಬೇಕೆಂಬ ಉದ್ದೇಶ ಹೊಂದಿದೆ ಎಂದು ತಿಳಿಸಿದರು.
ಹವಾಮಾನ ವೈಪರೀತ್ಯದಿಂದ ಕೆಲವು ಕಡೆ ಬರ, ಮತ್ತೆ ಕೆಲವೆಡೆ ಅತಿವೃಷ್ಟಿ ಉಂಟಾಗುತ್ತಿದೆ. ಇದರಿಂದ ರೈತರು ಸಂಕಷ್ಟದಲ್ಲಿ ಜೀವನ ಸಾಗಿಸುವಂತಿದೆ. ಪರಿಸರ ನಾಶದಿಂದ ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಮುಂದಾದರೂ ನಾವು ಪರಿಸರ ಸಂರಕ್ಷಣೆಗೆ ಕೈ ಜೋಡಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.