ಹರಪನಹಳ್ಳಿ: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ತಾಲೂಕು ಬಿಜೆಪಿ ಮಂಡಲ ಮಂಗಳವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಗಿರೀಶ ಬಾಬುಗೆ ಮನವಿ ಸಲ್ಲಿಸಿತು.
ಇದನ್ನೂ ಓದಿ: ಎಲೆಕ್ಷನ್ಗೆ ಕಾಂಗ್ರೆಸ್ ಕಲೆಕ್ಷನ್ : ಸಿಎಂ ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಕೆಲ ತಿಂಗಳು ಆಗಿವೆ. ಅಡಳಿತದಲ್ಲಿ ಭ್ರಷ್ಟಾಚಾರ, ದಬ್ಬಾಳಿಕೆ, ಕಾನೂನು ಅವ್ಯವಸ್ಥೆಗೆ ಜನರು ರೋಸಿಹೋಗಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಐಟಿ ದಾಳಿ ನಡೆಸಿದಾಗ 42 ಕೋಟಿ ರೂ. ಪತ್ತೆಯಾಗಿದೆ.
ಇದು ಕಮಿಷನ್ ರೂಪದಲ್ಲಿ ಬಂದಿರುವ ಹಣವಾಗಿದೆ ಎಂದು ಸುದ್ದಿಯಾಗಿದೆ. ಅಲ್ಲದೆ ಸಾವಿರಾರು ಕೋಟಿ ರೂ. ಸಂಗ್ರಹ ಮಾಡಿ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಖರ್ಚಿಗೆ ಕಲೆಕ್ಷನ್ ಮಾಡಲಾಗುತ್ತಿದೆ. ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಹಾಗೂ ಕಮಿಷನ್ ಕೇಂದ್ರವಾಗಿದೆ ಎಂದು ದೂರಿದರು.
ರಾಜ್ಯದಲ್ಲಿ ತೀವ್ರ ಬರವಿದ್ದು, ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ನೀಡಿಲ್ಲ. ಅನಿಯಮಿತ ಲೋಡ್ಶೆಡ್ಡಿಂಗ್ ಹೆಚ್ಚಾಗಿದೆ. ವರ್ಗಾವಣೆ ದಂಧೆ ನಡೆಯುತ್ತಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಬಾಗಳಿ ಕೊಟ್ರೇಶಪ್ಪ, ಸಾರಿಗೆ ಸಂಸ್ಥೆ ಮಾಜಿ ನಿರ್ದೇಶಕ ಅರುಂಡಿ ನಾಗರಾಜ, ಮಂಡಲ ಪ್ರಧಾನ ಕಾರ್ಯದರ್ಶಿ ಮುದುಕವ್ವನವರ ಶಂಕರ, ಉದಯಕುಮಾರ, ಯಲ್ಲಪ್ಪ, ಬಣಕಾರ ಜಗದೀಶ, ಕುಸುಮಾ, ರೇಖಮ್ಮ, ಮಾರಪ್ಪ, ಜಟ್ಟೆಪ್ಪ ಇತರರಿದ್ದರು.