ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ 9 ದಿನಗಳಿಂದ ನಡೆಯುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಧರಣಿಗೆ ಬುಧವಾರ ತಾಲೂಕು ಸಾರ್ವಜನಿಕ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಬೆಂಬಲ ಸೂಚಿಸಿದರು.
ಈ ವೇಳೆ ಸಮಿತಿಯ ತಾಲೂಕು ಅಧ್ಯಕ್ಷ ಟಿ. ಸೋಮಶೇಖರ್ ಮಾತನಾಡಿ, ಗ್ರಾಮ ಮಟ್ಟದಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಕೆಲಸ ಕಾರ್ಯಗಳು ಆಗಬೇಕಾದರೆ ಗ್ರಾಮ ಆಡಳಿತ ಅಧಿಕಾರಿಗಳ ಸೇವೆ ಅಪಾರ. ಪ್ರಕೃತಿ ವಿಕೋಪದಡಿ ಹಾನಿ ಉಂಟಾದರೆ ಅದರ ಪರಿಹಾರಕ್ಕಾಗಿ ಹಾಗೂ ವಿವಿಧ ಪ್ರಮಾಣ ಪತ್ರವನ್ನು ಪಡೆಯಬೇಕಾದರೆ ಪ್ರಾಥಮಿಕ ಹಂತದಲ್ಲಿ ಆಡಳಿತಾಧಿಕಾರಿಗಳ ಕಾರ್ಯ ಅತೀ ಮುಖ್ಯವಾಗಿದೆ. ಅಗತ್ಯ ಮೂಲ ಸೌಕರ್ಯದ ನಡುವೆಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಈ ದೆಸೆಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಕಳೆದ 9 ದಿನದಿಂದ ಧರಣಿ ನಡೆಸುತ್ತಿದ್ದಾರೆ. ಇದರಿಂದ ಗ್ರಾಮಗಳಲ್ಲಿ ಸೇವೆಗಳು ಸ್ಥಗಿತಗೊಂಡಿದ್ದು, ಜನರು ತುಂಬಾ ತೊಂದರೆ ಪಡುತ್ತಿದ್ದಾರೆ. ಆದರೆ ಸರ್ಕಾರ ಇತ್ತ ಗಮನಹರಿಸಿಲ್ಲ. ಆದ್ದರಿಂದ ಇನ್ನಾದರೂ ಈ ಸಂಬಂಧ ಮಧ್ಯಪ್ರವೇಶಿಸಿ ಬೇಡಿಕೆಗಳನ್ನು ಈಡೇರಿಸುವುದರ ಮೂಲಕ ಸಾರ್ವಜನಿಕರಿಗೆ ಕಂದಾಯ ಇಲಾಖೆಯ ಸೇವೆಯನ್ನು ಪಡೆಯಲು ತೊಡುಕಾಗದಂತೆ ಅನುಕೂಲ ಕಲ್ಪಿಸಬೇಕು ಎಂದು ತಿಳಿಸಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್, ಉಪಾಧ್ಯಕ್ಷ ಸುಬ್ಬಣ್ಣ, ಖಜಾಂಚಿ ಸುದೇಶ್, ನಿರ್ದೇಶಕರಾದ ನಟರಾಜುಗೌಡ, ರಫೀವುಲ್ಲಾ ಖಾನ್, ಕಲೀಂ ಉಲ್ಲಾಖಾನ್, ಕುಮಾರ್, ಸೋಮಶೇಖರ್, ಸಂಜಯ್, ಗ್ರಾಮ ಆಡಳಿತ ಅಧಿಕಾರಿಗಳಾದ ಶೇಷಣ್ಣ, ಕಾರ್ತಿಕ್, ಮಾರುತಿ, ಕಾವ್ಯ, ಹೇಮಾ, ಸೌಮ್ಯಾ ಇತರರಿದ್ದರು.