ಚಿಂಚೋಳಿ: ಸರ್ಕಾರಿ ಕಚೇರಿಗಳಿಗೆ ಬರುವ ಜನರ ಸಮಸ್ಯೆಗೆ ಸಕರಾತ್ಮಕವಾಗಿ ಸ್ಪಂದಿಸಬೇಕು. ಅಲ್ಲದೆ ನಿಗದಿತ ಅವಧಿಯೊಳಗೆ ಪರಿಹಾರ ಕಲ್ಪಿಸುವ ಕೆಲಸಗಳಾಗಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಾಕೀತು ಮಾಡಿದರು.
ಪುರಸಭೆ ಕಚೇರಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಸ್ವಚ್ಛತೆಗೆ ಆದ್ಯತೆ ನೀಡಿ, ಒಂದಿಷ್ಟು ಹಸಿರು ವಾತಾವರಣ ಬೆಳೆಸಿ. ಅಲ್ಲದೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಎಚ್ಚರಿಕೆಯಿಂದ ಕೆಲಸ ಮಾಡಿ. ಇನ್ನೊಂದು ವೇಳೆ ದುಡ್ಡು ತೆಗೆದುಕೊಂಡಿರುವ ಬಗ್ಗೆ ಆರೋಪ ಕೇಳಿಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ದಸ್ತಾಪುರದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲಾ ದಾಖಲಾತಿ, ಅಡುಗೆ ಕೋಣೆ ಸೇರಿ ವಿವಿಧ ಸೌಕರ್ಯ ಪರಿಶೀಲಿಸಿದರು. ಚಿಮ್ಮಇದಲಾಯಿ ಗ್ರಾಮದ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿ, ಕಲಿಕಾ ಮಟ್ಟ ಪರಿಶೀಲಿಸಿದರು. ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ಶಿಕ್ಷಣ ನೀಡಬೇಕು, ಅಲ್ಲದೆ ಶಿಕ್ಷಣಾಧಿಕಾರಿಗಳು ಪ್ರತಿ ಶಾಲೆಗೂ ಭೇಟಿ ನೀಡಿ ಮಕ್ಕಳ ಶಿಕ್ಷಣ ಮಟ್ಟವನ್ನು ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.
ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಹಿಂದುಳಿದ ವರ್ಗಗಳ ಮಹಿಳಾ ವಸತಿ ನಿಲಯ, ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯ, ಪುರಸಭೆ ಘನತ್ಯಾಜ್ಯ ವಿಲೇವಾರಿ ಘಟಕ, ಲೋಕೋಪಯೋಗಿ ಇಲಾಖೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದರು.
ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ತಾಪಂ ಇಒ ಶಂಕರ ರಾಠೋಡ್, ಶಿಶು ಅಭಿವೃದ್ಧಿ ಅಧಿಕಾರಿ ಗುರುಪ್ರಸಾದ ಕವಿತಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಮಾರುತಿ ಯಂಗನೂರ, ಪುರಸಭೆ ಮುಖ್ಯಾಧಿಕಾರಿ ಕಾಶೀನಾಥ ಧನ್ನಿ, ಪ್ರಮುಖರಾದ ಅನುಸೂಯ, ಪ್ರಭುಲಿಂಗ, ವೆಂಕಟೇಶ ದುಗ್ಗನ್, ಬಸವರಾಜ ಬೈನೂರ ಇತರರಿದ್ದರು.