ಚಿಕ್ಕಮಗಳೂರು: ಜಿಲ್ಲೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸಲು ಯುವ ಜನತೆ ಮುಂದೆ ಬರಬೇಕು. ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಮಾತ್ರ ಸಣ್ಣ ಕೈಗಾರಿಕೆಗಳಿವೆ. ಹೀಗಾಗಿ ಜಿಲ್ಲೆ ಅಭಿವೃದ್ಧಿ ಹೊಂದುತ್ತಿಲ್ಲ ಎಂದು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಆರ್.ಎಂ.ಮಹೇಶ್ ಬೇಸರ ವ್ಯಕ್ತಪಡಿಸಿದರು.
ನಗರದ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಚೇಂಬರ್ ಆಫ್ ಕಾಮರ್ಸ್ ಹಾಗೂ ಬೆಂಗಳೂರಿನ ಕಾಸಿಯಾ ಸಂಸ್ಥೆಯಿಂದ ಆಯೋಜಿಸಿದ್ದ ರಫ್ತು ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೇ ಜಿಲ್ಲೆ ಅಭಿವೃದ್ಧಿಯಾಗ ಬೇಕಾದರೆ ಅಲ್ಲಿ ಕೈಗಾರಿಕೆಗಳ ಸ್ಥಾಪನೆಯಾಗಬೇಕು. ಇದರಿಂದ ಜಿಲ್ಲೆಯ ಸಹಸ್ರಾರು ಜನರಿಗೆ ಉದ್ಯೋಗ ದೊರೆಯುತ್ತದೆ. ಆ ಮೂಲಕ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಹೇಳಿದರು.
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸಲು ಮತ್ತು ರಫ್ತು ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚಿನ ವರ್ಷಗಳಲ್ಲಿ ಹಲವು ಸವಲತ್ತುಗಳನ್ನು ನೀಡುತ್ತಿದ್ದು, ಯುವಜನತೆ ಅವುಗಳನ್ನು ಸದ್ಬಳಕೆ ಮಾಡಿಕೊಂಡು ಉದ್ಯಮಿಗಳಾಗಬೇಕು ಎಂದು ಕಿವಿಮಾತು ಹೇಳಿದರು.
ಕಾಸಿಯ ಸಂಸ್ಥೆ ಅಧ್ಯಕ್ಷ ಸಿ.ಎ.ಶಶಿಧರ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸಲು ಯುವಜನತೆ ಮುಂದೆ ಬಂದಲ್ಲಿ ತಮ್ಮ ಸಂಸ್ಥೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ವಿಶ್ವೇಶ್ವರಯ್ಯ ಟ್ರೇಡ್ ಪ್ರಮೋಷನ್ ಕಾರ್ಪೊರೇಷನ್ ಉಪ ನಿರ್ದೇಶಕ ಮನ್ಸೂರ್ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸ್ಥಾಪಿಸುವ ಬಗ್ಗೆ ಮತ್ತು ರಫ್ತಿನ ಕುರಿತು ಉಪನ್ಯಾಸ ನೀಡಿದರು. ಕಾಸಿಯ ಸಂಸ್ಥೆ ಉಪಾಧ್ಯಕ್ಷ ಎಂ.ಜಿ.ರಾಜಗೋಪಾಲ್ ಅರುಣ್ ಪಡಿಯಾರ್, ಚೆಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷ ಶಾಂತಾ ರಾಮ್ ಹೆಗಡೆ, ನಿರ್ದೇಶಕರಾದ ಅಕ್ಕಿಕಾಳು ವೆಂಕಟೇಶ್, ಆನಂದ್ ಕುಮಾರ್ ಶೆಟ್ಟಿ, ಮೋಹನ್ ಕುಮಾರ್, ಶಿವಣ್ಣ, ಕುಮಾರಸ್ವಾಮಿ, ಕಾರ್ತಿಕ್ ಉಪಸ್ಥಿತರಿದ್ದರು.