ವಿಜಯಪುರ: ಹನ್ನೆರಡನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಗೈದ ಮಹಾತ್ಮ ಬಸವೇಶ್ವರರ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆಯೋಣ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಅಧ್ಯಕ್ಷ, ಶಾಸಕ ಶಾಮನೂರ ಶಿವಶಂಕರಪ್ಪ ಹೇಳಿದರು.
ಇಲ್ಲಿನ ಆನಂದ ನಗರದ ಶ್ರೀ ದಾನಮ್ಮ ದೇವಿ ದೇವಸ್ಥಾನದಲ್ಲಿ ಶುಕ್ರವಾರ 12ನೇ ಜಾತ್ರಾ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ತಿಕ ದೀಪೋತ್ಸವ ಹಾಗೂ ಧಾರ್ಮಿಕ ಸಭೆಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಬಸವಣ್ಣನವರ ಸಮಕಾಲೀನರಾದ ದಾನಮ್ಮ ದೇವಿಯ ಜಾತ್ರೋತ್ಸವ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ತನ್ನಿಮಿತ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.
ಸಾನ್ನಿಧ್ಯ ವಹಿಸಿದ್ದ ಮಮದಾಪುರದ ಅಭಿನವ ಮುರುಗೇಂದ್ರ ಮಹಾಸ್ವಾಮೀಜಿಗಳು ಆಶೀರ್ವಚನ ನೀಡುತ್ತಾ, ಶರಣರು ಕಂಡ ಸಮ ಸಮಾಜ ನಿರ್ಮಾಣ ನಮ್ಮೆಲ್ಲರ ಆಶಯವಾಗಬೇಕೆಂದರು.
ಶಾಸಕ ವಿಠಲ ಕಟಕದೊಂಡ ಅಧ್ಯಕ್ಷತೆ ವಹಿಸಿದ್ದರು. ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ಅಧ್ಯಕ್ಷ ವಿಜಯಕುಮಾರ್, ವೀರಶೈವ ಮಹಾಸಭೆಯ ಜಿಲ್ಲಾಧ್ಯಕ್ಷ ವಿ.ಸಿ. ನಾಗಠಾಣ, ಉಪಾಧ್ಯಕ್ಷ ಅಥಣಿ ವೀರಣ್ಣನವರು ಉಪಸ್ಥಿತರಿದ್ದರು. ದೇವಸ್ಥಾನ ಕಮೀಟಿ ಅಧ್ಯಕ್ಷ ಅಪ್ಪು ಇಟ್ಟಂಗಿ ಸ್ವಾಗತಿಸಿದರು. ಬಸವರಾಜ್ ಮರನೂರ ನಿರೂಪಿಸಿದರು.