ತಿರುವನಂತಪುರಂ: ರಾಷ್ಟ್ರೀಯ ಚುನಾವಣಾ ಆಯೋಗವು ಶನಿವಾರ ಲೋಕಸಭೆ ಎಲೆಕ್ಷನ್ಗೆ ದಿನಾಂಕ ಘೋಷಿಸಿದ್ದು, ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಆದರೆ, ಚುನಾವಣಾ ಆಯೋಗವು ದಿನಾಂಕ ಘೋಷಿಸುತ್ತಿದ್ದಂತೆ ಆಕ್ಷೇಪ ವ್ಯಕ್ತಪಡಿಸಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಶುಕ್ರವಾರ ನಡೆಯಲಿರುವ ಮತದಾನವನ್ನು ಮುಂದೂಡುವಂತೆ ಮನವಿ ಮಾಡಿದೆ.
ಶುಕ್ರವಾರ ಮುಸ್ಲಿಮರಿಗೆ ಪವಿತ್ರವಾದ ದಿನವಾಗಿದ್ದು, ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತದಾನವನ್ನು ಮುಂದೂಡುವಂತೆ ಮನವಿ ಮಾಡಿದೆ. ಏಪ್ರಿಲ್ 19 ಹಾಗೂ 26ರಂದು ತಮಿಳುನಾಡು ಹಾಗೂ ಕೇರಳದಲ್ಲಿ ಮೊದಲ ಹಂತದ ಮತದಾನ ಶುಕ್ರವಾರದಂದು ನಡೆಯಲಿದೆ.
ಇದನ್ನೂ ಓದಿ: ಈಶ್ವರಪ್ಪ ಪುತ್ರನಿಗೆ ಟಿಕೆಟ್ ತಪ್ಪಲು ಕಾರಣ ನಾನಲ್ಲ: ಬಿ.ಎಸ್. ಯಡಿಯೂರಪ್ಪ
ಈ ಕುರಿತು ಪ್ರತಿಕ್ರಿಯಿಸಿರುವ IUML ಪ್ರಧಾನ ಕಾರ್ಯದರ್ಶಿ ಪಿಎಂಎ ಸಲಾಮ್, ಶುಕ್ರವಾರ, ಏಪ್ರಿಲ್ 26 ರಂದು ಕೇರಳದಲ್ಲಿ ಚುನಾವಣೆ ನಡೆಸುವುದರಿಂದ ಮತದಾರರು, ಚುನಾವಣಾ ಅಧಿಕಾರಿಗಳು ಮತ್ತು ಪೋಲಿಂಗ್ ಏಜೆಂಟ್ಗಳಿಗೆ ಅನಾನುಕೂಲತೆ ಉಂಟಾಗುತ್ತದೆ. ಶುಕ್ರವಾರ ಮಸೀದಿಗಳಲ್ಲಿ ಮುಸ್ಲಿಮರು ಸೇರುವ ದಿನವಾಗಿದೆ. ಕೇರಳ ಮತ್ತು ತಮಿಳುನಾಡಿನಲ್ಲಿ ಈ ದಿನ ಮತದಾನ ಮಾಡಲು ಕಷ್ಟವಾಗುತ್ತದೆ. ಈ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.
2024 ರ ಲೋಕಸಭಾ ಚುನಾವಣೆಯನ್ನು ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ನಡೆಸಲಾಗುವುದು ಎಂದು ಚುನಾವಣಾ ಆಯೋಗವು ಮಾರ್ಚ್ 16ರಂದು ಘೋಷಿಸಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.