ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಇದರ ನಡುವೆಯೇ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿ ನಡೆದಿದ್ದು, ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ತಂಡ ಬಿಸಿ ಮುಟ್ಟಿಸಿದೆ.
ಬಿಬಿಎಂಪಿ ಅಧಿಕಾರಿಗೆ ಶಾಕ್
ಮಹಾಲಕ್ಷ್ಮೀ ಲೇಔಟ್ನಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ಇಂದು ಮುಂಜಾನೆಯೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. 15 ಜನ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ. ಮನೆ ಒಳಗಡೆ ಇರುವ ಕಾರಿನ ಒಳಗಡೆಯು ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಒಬ್ಬರು ಎಸ್ಪಿ, ಇಬ್ಬರು ಡಿವೈಎಸ್ಪಿ ಮತ್ತು ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಗಂಗಾಧರಯ್ಯ ಬಿಬಿಎಂಪಿಯ ಟೌನ್ ಪ್ಲಾನಿಂಗ್ ಅಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ: ವಿರಾಟ್ ಕೊಹ್ಲಿಗೆ ಹಸಿರು ಜರ್ಸಿ ದುರಾದೃಷ್ಟಕರ? ಇಲ್ಲಿದೆ ಅಚ್ಚರಿಯ ಅಂಕಿ-ಅಂಶ!
ಕೋಲಾರದಲ್ಲೂ ದಾಳಿ
ಕೋಲಾರದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ (EO) ಎನ್.ವೆಂಕಟೇಶಪ್ಪ ಮನೆ ಮೇಲೆ ದಾಳಿಯಾಗಿದೆ. ಬಂಗಾರಪೇಟೆ ಪಟ್ಟಣದಲ್ಲಿ ಮೂರು ಕಡೆ, ಮುಳಬಾಗಿಲಿನಲ್ಲಿ ಎರಡು ಕಡೆ ಸೇರಿದಂತೆ ವೆಂಕಟೇಶಪ್ಪಗೆ ಸೇರಿದ ಐದು ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಳೆದ ಎಂಟು ವರ್ಷಗಳಿಂದ ಬಂಗಾರಪೇಟೆ ತಾಲ್ಲೂಕು ಪಂಚಾಯ್ತಿ ಇಓ ಆಗಿ ವೆಂಕಟೇಶಪ್ಪ ಕೆಲಸ ಮಾಡುತ್ತಿದ್ದರು. ಎರಡು ದಿನಗಳ ಹಿಂದೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಗೆ ವರ್ಗಾವಣೆಯಾಗಿತ್ತು. ಇದರ ಬೆನ್ನಲ್ಲೇ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು. ದಾಖಲಾತಿಗಳ ಪರಿಶೀಲನೆ ನಡೆಯುತ್ತಿದೆ.
ಬೀದರ್ನಲ್ಲಿ 6 ಕಡೆ ರೇಡ್
ಗಡಿ ಜಿಲ್ಲೆ ಬೀದರ್ನಲ್ಲಿ ಬೆಳಂ ಬೆಳ್ಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಜಿಲ್ಲೆಯಾದ್ಯಂತ 6 ಕಡೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಉಪ ತಹಸೀಲ್ದಾರ್ ವಿಜಯಕುಮಾರ್ ಸ್ವಾಮಿ ನಿವಾಸಗಳ ಮೇಲೆ ದಾಳಿಯಾಗಿದೆ. ಬೀದರ್ನ ಆನಂದ್ ನಗರ ಹಾಗೂ ಬಸವಕಲ್ಯಾಣದಲ್ಲಿರುವ ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಸವಕಲ್ಯಾಣ ಮುಡಬಿ ಕಚೇರಿ ಹಾಗೂ ನಗರದ ಗ್ಯಾರೆಜ್ ಮೇಲೂ ದಾಳಿಯಾಗಿದೆ. ಬಸವಕಲ್ಯಾಣ ತಾಲೂಕಿನ ಮುಡಬಿಯಲ್ಲಿ ಉಪ ತಹಸೀಲ್ದಾರಾಗಿ ವಿಜಯಕುಮಾರ್ ಸ್ವಾಮಿ ಕಾರ್ಯನಿರ್ವಹಿಸುತ್ತಿದ್ದರು. ಇಷ್ಟೇ ಅಲ್ಲದೆ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿ ನಿವಾಸ ಹಾಗೂ ಕಚೇರಿ ಮೇಲೂ ದಾಳಿಯಾಗಿದೆ. ಸಣ್ಣ ನೀರಾವರಿ ಇಲಾಖೆ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಸುರೇಶ್ ಮೇದಾ ನಿವಾಸ ಹಾಗೂ ಕಚೇರಿ ಮೇಲೆ ದಾಳಿಯಾಗಿದೆ. ಬೀದರ್ನ ಗುರುನಗರದ ನಿವಾಸ ಹಾಗೂ ನೌಬಾದ್ನಲ್ಲಿರುವ ಕಚೇರಿ ಮೇಲೆ ದಾಳಿ ನಡೆದಿದೆ. ಲೋಕಾಯುಕ್ತ ಡಿವೈಎಸ್ಪಿ ಎನ್.ಎಂ.ಓಲೇಕಾರ್ ನೇತೃತ್ವದಲ್ಲಿ ದಾಳಿಯಾಗಿ ದಾಖಲಾತಿಗಳ ಪರಿಶೀಲನೆ ನಡೆಯುತ್ತಿದೆ.
ಬಳ್ಳಾರಿಯಲ್ಲೂ ಲೋಕಾ ಶಾಕ್
ಬಳ್ಳಾರಿಯಲ್ಲಿ ಜೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರು ಮತ್ತು ಬಳ್ಳಾರಿ ತಂಡದಿಂದ ದಾಳಿಯಾಗಿದೆ. ಬಳ್ಳಾರಿಯ ಎಇಇ ಆಗಿ ಕಾರ್ಯನಿರ್ವಹಿಸುವ ಹುಸೇನ್ ಸಾಬ್ ಅವರ ಬಳ್ಳಾರಿ ಬುಡಾ ಕಾಂಪ್ಲೆಕ್ಸ್ನಲ್ಲಿರುವ ಕಚೇರಿ ಹಾಗೂ ರಾಘವೇಂದ್ರ ಕಾಲನಿಯಲ್ಲಿರುವ ಮನೆ ಮತ್ತು ಹುಟ್ಟೂರು ಶಿಡಿಗಿನಮೊಳದಲ್ಲಿರುವ ನಿವಾಸದ ಮೇಲೆ ಏಕಕಾಲದಲ್ಲಿ ದಾಳಿಯಾಗಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಯುತ್ತಿದೆ.
ಇದನ್ನೂ ಓದಿ: ಸಚಿನ್ ಬದುಕಿನ ಹಾಫ್ ಸೆಂಚುರಿಗೆ ಚಿನ್ನದ ತೂಕ!; ಇಂದು ಸಚಿನ್ ತೆಂಡುಲ್ಕರ್ 50ನೇ ಜನ್ಮದಿನ
ದಾವಣಗೆರೆಯಲ್ಲೂ ದಾಳಿ
ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ನಿವೃತ್ತ ಡಿಸಿಎಫ್ ನಾಗರಾಜ್ ಹಾಗೂ ಹೊಳಲ್ಕೆರೆ ತಹಸೀಲ್ದಾರ್ ನಾಗರಾಜ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಡಿಸಿಎಫ್ ಅವರ ಶಿವಮೊಗ್ಗ ಮನೆ ಹಾಗೂ ತಹಸೀಲ್ದಾರ್ ನಾಗರಾಜ್ ಅವರ ಮನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ನಿವಾಸದ ಮೇಲೆ ದಾಳಿಯಾಗಿದೆ. ಡಿಸಿಎಫ್ ಅವರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಳಿಯ ತೋಟದ ಮನೆಯ ಮೇಲೂ ದಾಳಿಯಾಗಿದೆ. ಇಬ್ಬರು ಅಧಿಕಾರಿಗಳಿಗೆ ಸಂಬಂಧಿಸಿದ ಏಳು ಸ್ಥಳಗಳ ಮೇಲೆ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ದಾಳಿ ನಡೆದಿದ್ದು, ಕಡತಗಳ ಪರಿಶೀಲನೆ ನಡೆಯುತ್ತಿದೆ.
ಎಲ್ಲ ಕಡೆ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಸಮಸಮಾಜ ನಿರ್ಮಾಣಕ್ಕೆ ಬಸವಣ್ಣ ಕಾರಣ: ಗಾಂಧಿನಗರ ಬಿಜೆಪಿ ಅಭ್ಯರ್ಥಿ ಸಪ್ತಗಿರಿಗೌಡ ಅಭಿಮತ