ಮಂಡ್ಯ: ನಿವೇಶನದ ಖಾತೆ ಮಾಡಿಕೊಡುವುದಕ್ಕೆ ಸಂಬಂಧಿಸಿದಂತೆ ಕಚೇರಿಯಲ್ಲಿಯೇ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ (ಗ್ರೇಡ್-1) ದಯಾನಂದ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.
ಮಂಡ್ಯ ನಗರದ ಶ್ರೆರಾಮ ಬಡಾವಣೆಯಲ್ಲಿ ಮಂಜುನಾಥ್ ಎಂಬುವರು 30*40 ಅಳತೆಯ ನಿವೇಶನ ಖರೀದಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ತನ್ನ ಪತ್ನಿ ಹಾಗೂ ಅತ್ತೆಯವರ ಹೆಸರಿಗೆ ಜಂಟಿ ಖಾತೆ ಮಾಡಿಸಿಕೊಡುವಂತೆ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಖಾತೆ ಬದಲಾವಣೆಗೆ ದಯಾನಂದ 40 ಸಾವಿರ ರೂ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಕೊನೆಗೆ 35 ಸಾವಿರ ರೂ. ನೀಡುವಂತೆ ಒಪ್ಪಿಕೊಂಡಿದ್ದ.
ಈ ಸಂಬಂಧ ಮಂಜುನಾಥ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅಂತೆಯೇ 5 ಸಾವಿರ ರೂ ಕೊಡಲು ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿದ್ದರು. ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಪೊಲೀಸರು ಮಧ್ಯಾಹ್ನ 12.30ರ ಸಮಯದಲ್ಲಿ ದಾಳಿ ನಡೆಸಿ ದಯಾನಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ವಶಕ್ಕೆ ಪಡೆದಿದ್ದಾರೆ. ಬಳಿಕ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ.
ಲೋಕಾಯುಕ್ತ ಎಸ್ಪಿ ಶ್ರೀನಾಥ್ಜೋಷಿ ಮತ್ತು ಡಿವೈಎಸ್ಪಿ ಸುನೀಲ್ಕುಮಾರ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ಗಳಾದ ಪ್ರಕಾಶ್, ಮೋಹನ್ ರೆಡ್ಡಿ, ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆಯಿತು. ಸಿಬ್ಬಂದಿ ಮಹದೇವಸ್ವಾಮಿ, ಶಂಕರ್, ಶರತ್, ಯೋಗೇಶ್, ನಂದೀಶ್, ನವೀನ್, ಶಿವಕುಮಾರ್ ತಂಡದಲ್ಲಿದ್ದರು.