ಬೆಂಗಳೂರು: ಘನತ್ಯಾಜ್ಯವನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿರುವ ಬಗ್ಗೆ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಖುದ್ದು ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಉತ್ತರ ವಿಭಾಗದ ಯಲಹಂಕ ಬಳಿಯ ಕೆರೆ ಸುತ್ತ ಮುತ್ತ ರಾಶಿಗಟ್ಟಲೇ ಕಸವನ್ನು ಎಸೆಯಲಾಗಿದೆ ಎಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಗುರುವಾರ ಸ್ಥಳಕ್ಕೆ ಖುದ್ದು ಲೋಕಾಯುಕ್ತರು ಮತ್ತ ಉಪ ಲೋಕಾಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ೧ ಕಿ.ಮೀ ವರೆಗೆ ಬಿದ್ದಿದ್ದ ಕಸವನ್ನು ಕಂಡು ಗರಂ ಆದ ಲೋಕಾಯುಕ್ತರು, ಏಕೆ ಇಲ್ಲಿ ಕಸವನ್ನು ಡಂಪ್ ಮಾಡಲಾಗುತ್ತಿದೆ. ಇದನ್ನು ಯಾಕೆ ಸ್ವಚ್ಛಗೊಳಿಸುವ ಕೆಲಸ ಮಾಡಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ಜಾಗದಲ್ಲಿ ಕಸ ಹಾಕುವವರಿಗೆ ದಂಡ ಹಾಕಬೇಕು. ಇದಕ್ಕೆ ಶಾಶ್ವತ ಪರಿಹಾರ ಹುಡುಕಿ ಮೇ ೨೭ ರ ಒಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.