ಬಳ್ಳಾರಿ: ಗೋ ಹತ್ಯೆ ನಿಷೇಧ ಕಾಯ್ದೆ ಆಯಿತು, ಇನ್ನು ಮುಂದೆ ಲವ್ ಜಿಹಾದ್ ಕಾಯ್ದೆ ಕಡೆ ನಾವು ಗಮನಹರಿಸಲಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್. ಈಶ್ವರಪ್ಪ ಹೇಳಿದರು. ಗೋವಿನ ರಕ್ಷಣೆ ಮಾಡುವ ತೀರ್ಮಾನ ತೆಗೆದುಕೊಂಡು ಯಶಸ್ವಿಯಾಗಿದ್ದೆವೆ. ಇನ್ನು ಲವ್ ಜಿಹಾದ್ ನಿಂದ ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕಾಗಿದೆ. ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ಮಸೂದೆ ಮಂಡನೆಯಾಗಲಿದೆ ಎಂದು ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು.
ರಸ್ತೆ, ಚರಂಡಿ ಕಾಮಗಾರಿಯಷ್ಟೇ ಸರ್ಕಾರದ ಕೆಲಸವಲ್ಲ. ಭಾರತೀಯ ಸಂಸ್ಕೃತಿಯನ್ನು ಕೂಡ ಉಳಿಸಬೇಕಿದೆ. ಗೋವನ್ನು ಮಾತೆ ಎಂದು ಕರೆಯುತ್ತೇವೆ. ಆದರೆ, ಗೋವುಗಳ ಹತ್ಯೆ ನಡೆಯುತ್ತಿದೆ. ಇದರಿಂದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಹೆಳಿದಂತೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರು ರಾಜಕೀಯ ಕಾರಣಗಳಿಂದ ಗೋ ಹತ್ಯೆ ನಿಷೇಧ ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವಿರೋಧ ಮಾಡುವವರ ಮನೆಯ ಹೆಣ್ಣುಮಕ್ಕಳನ್ನು ಕೇಳಿದರೆ ಅವರು ಕೂಡ ಗೋಹತ್ಯೆ ನಿಷೇಧ ಕಾಯ್ದೆಯನ್ನು ಬೆಂಬಲಿಸುತ್ತಾರೆ ಎಂದು ಸಚಿವ ಈಶ್ವರಪ್ಪ ಹೇಳಿದರು.
ಜೆಡಿಎಸ್, ಬಿಜೆಪಿಯನ್ನು ಬೆಂಬಲಿಸುವುದು ಹೊಸತಲ್ಲ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ನ ಸಭಾಪತಿಯನ್ನು ಪದಚ್ಯುತಗೊಳಿಸಲು ನಿರ್ಧರಿಸಲಾಗಿದೆ. ಆದರೆ, ಬಿಜೆಪಿಗೆ ಬಹುಮತ ಇಲ್ಲ. ಇದರಿಂದಾಗಿ ಜೆಡಿಎಸ್ ಬೆಂಬಲದೊಂದಿಗೆ ಬಿಜೆಪಿ ಸದಸ್ಯನನ್ನು ಸಭಾಪತಿಯಾಗಿ ಆಯ್ಕೆ ಮಾಡಲಾಗುವುದು ಎಂದು ಸಚಿವ ಈಶ್ವರಪ್ಪ ತಿಳಿಸಿದರು.