ರಾಮನಗರ: ಮನೆಯವರು ತಮ್ಮ ಪ್ರೀತಿಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಪ್ರೇಮಿಗಳಿಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹೊಗೇನಕಲ್ ಜಲಪಾತದ ಬಳಿ ನಡೆದಿದೆ. ಘಟನೆಯಲ್ಲಿ ಯುವಕ ಮೃತಪಟ್ಟಿದ್ದು, ಯುವತಿ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ.
ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಚಾಮುಂಡಿಪುರದ ನಿವಾಸಿಗಳಾದ ಉಮೇಶ್ (24) ಹಾಗೂ ಯುವತಿ ಇಬ್ಬರು ಒಂದೇ ಊರಿನವರರಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ಬೇರೆ ಬೇರೆ ಜಾತಿಯವರಾಗಿದ್ದರಿಂದ ಇವರ ಪ್ರೀತಿಗೆ ಮನೆಯಲ್ಲಿ ಒಪ್ಪಿಗೆ ಸಿಕ್ಕಿರಲಿಲ್ಲ. ಸೆಪ್ಟೆಂಬರ್ 9ರಂದು ಪ್ರೇಮಿಗಳಿಬ್ಬರು ಗ್ರಾಮದಿಂದ ನಾಪತ್ತೆಯಾಗಿದ್ದರು.
ಈ ಸಂಬಂಧ ಯುವಕ ಕಹಾಗೂ ಯುವತಿಯ ಕುಟುಂಬಸ್ಥರು ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಕಾಣೆಯಾಗಿರುವವರ ಫೋಟೋಗಳನ್ನು ಎಲ್ಲಾ ಠಾಣೆಗೆ ಕಳುಹಿಸಿ ಕೊಟ್ಟಿದ್ದರು. ಮಂಗಳವಾರ ಬೆಳಗ್ಗೆ ಹೊಗೇನಕಲ್ ಜಲ್ಪಪಾತದ ಬಳಿ ಪ್ರೇಮಿಗಳಿಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ.
ಇದನ್ನೂ ಓದಿ: VIDEO| ಸ್ಥಳೀಯ ನಾಯಕರ ಕಡೆಗಣನೆ; ಕೇಂದ್ರ ಸಚಿವರನ್ನೇ ಕೂಡಿ ಹಾಕಿದ ಬಿಜೆಪಿ ಕಾರ್ಯಕರ್ತರು
ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಕಾಣೆಯಾಗಿರುವ ಪ್ರೇಮಿಗಳು ಇವರೇ ಎಂಬುದು ಖಚಿತವಾಗಿದೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಯುವಕ ಉಮೇಶ್ ಮೃತಪಟ್ಟಿದ್ದಾನೆ. ಯುವತಿಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಾವು ಕಾಣೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದು ಯುವಕನಿಗೆ ತಿಳಿದು ಬಂದಿದೆ. ಕುಟುಂಬದವರು ಅಂತರ್ಜಾತಿ ಪ್ರೀತಿಯನ್ನು ಒಪ್ಪಿಕೊಳ್ಳುವುದಿಲ್ಲ. ಇದರಿಂದ ತನಗೆ ಸಂಕಷ್ಟ ಎದುರಾಗುತ್ತದೆ ಎಂದು ಅರಿತ ಯುವಕ ಆತ್ಮಹತ್ಯೆ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ. ಎಲ್ಲಾ ಆಯಾಮದಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.