More

    ಆಟೋಗೆ ಲಾರಿ ಡಿಕ್ಕಿ ಹೊಡೆದು ಮೂವರ ದುರ್ಮರಣ

    ಮದ್ದೂರು: ತಾಲೂಕಿನ ದುಂಡನಹಳ್ಳಿಯ ಸಮೀಪ ಮದ್ದೂರು-ತುಮಕೂರು ಹೆದ್ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯೊಂದು ಪ್ಯಾಸೆಂಜರ್ ಆಟೋಗೆ ಮಂಗಳವಾರ ರಾತ್ರಿ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ತಾಲೂಕಿನ ದುಂಡನಹಳ್ಳಿ ಗ್ರಾಮದ ಅಭಿ (20), ಮಲ್ಲನಕುಪ್ಪೆ ಗ್ರಾಮದ ಸೂರ್ಯ (23) ಹಾಗೂ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿಯ ಪ್ರಶಾಂತ್ (21) ಮೃತಪಟ್ಟವರು. ಮೂವರೂ ಆಟೋ ಚಾಲಕರಾಗಿದ್ದರು.

    ಘಟನೆ ವಿವರ: ಮಂಗಳವಾರ ಮಧ್ಯರಾತ್ರಿ ಸುಮಾರು 12.45ರಲ್ಲಿ ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ತುಂಬಿಕೊಂಡು ಲಾರಿ ತುಮಕೂರಿಗೆ ಕಡೆಗೆ ಹೋಗುತ್ತಿದ್ದಾಗ ಕೆಸ್ತೂರು ಕಡೆಯಿಂದ ಮಲ್ಲನಕುಪ್ಪೆ ಕಡೆಗೆ ಬರುತ್ತಿದ್ದ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.

    ವಿಷಯ ತಿಳಿದ ಮರಳು ದಂಧೆಕೋರರು ಸ್ಥಳಕ್ಕೆ ಆಗಮಿಸಿ ಲಾರಿಯಲ್ಲಿದ್ದ ಮರಳನ್ನು ಪಕ್ಕದ ಜಮೀನಿಗೆ ಹಾಕಿ ಮರಳು ಸಾಗಣೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ನಾಟಕವಾಡಿ ಅವರೇ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ಜತೆಗೆ ಮೃತರನ್ನು ಸ್ಥಳೀಯರು ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಗೆ ತಂದಿದ್ದಾರೆ.

    ಘಟನಾ ಸ್ಥಳಕ್ಕೆ ಎಸ್ಪಿ ಪರಶುರಾಮ್ ಭೇಟಿ ನೀಡಿದಾಗ, ತಾಲೂಕಿನ ಶಿಂಷಾ ನದಿ ಪಾತ್ರದಲ್ಲಿ ಅಕ್ರಮ ಮರಳುಗಾರಿಕೆಗೆ ಎಗ್ಗಿಲ್ಲದೆ ನಡೆಯುತ್ತಿದ್ದರೂ ಈ ಸಂಬಂಧ ಯಾರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಸೂಕ್ತ ಪರಿಹಾರ ಕೊಡಿ: ಡಿಎಸ್‌ಎಸ್ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಮಾತನಾಡಿ, ಮೂವರು ಯವಕರು ಕುಟುಂಬದವರಿಗೆ ಆಧಾರವಾಗಿದ್ದು, ಲಾರಿ ಮಾಲೀಕ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಬೇಕು. ಈ ಬಗ್ಗೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದ್ದಾರೆ.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts