ಮಡಿಕೇರಿ: ಜಿಲ್ಲೆಯ 16 ಹೋಬಳಿಗಳಲ್ಲಿ ಪ್ರಕೃತಿ ವಿಕೋಪ ಎದುರಿಸುವ ಸಂಬಂಧ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅಧಿಕಾರಿಗಳು ಹಾಗೂ ಎನ್ಡಿಆರ್ಎಫ್ ತಂಡ ಸಮನ್ವಯತೆ ಸಾಧಿಸಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಲಹೆ ಮಾಡಿದರು.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಕಮಾಂಡರ್, ಪೊಲೀಸ್ ಹಾಗೂ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಸಲಹೆ ಮಾಡಿದರು.
ಪ್ರಕೃತಿ ವಿಕೋಪವನ್ನು ಎದುರಿಸುವ ನಿಟ್ಟಿನಲ್ಲಿ ಎನ್ಡಿಆರ್ಎಫ್ ತಂಡಕ್ಕೆ ಬೇಕಿರುವ ಅಗತ್ಯ ಸಾಮಗ್ರಿಗಳನ್ನು ಒದಗಿಸುವ ಬಗ್ಗೆ ಚರ್ಚೆ ನಡೆಯಿತು. ನಂತರ ಎನ್ಡಿಆರ್ಎಫ್, ಪೊಲೀಸ್, ಅಗ್ನಿಶಾಮಕ ಇಲಾಖೆ, ಹೋಂ ಗಾರ್ಡ್ ತಂಡಗಳು ಒಟ್ಟುಗೂಡಿ ಕಲ್ಪಿತ ಪ್ರದರ್ಶನ ಏರ್ಪಡಿಸುವುದು ಸೇರಿದಂತೆ ಮತ್ತಿತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು.
ಕಮಾಂಡರ್ ಉಪಾಧ್ಯ, ಡಿವೈಎಸ್ಪಿ ದಿನೇಶ್ ಕುಮಾರ್, ನೋಡಲ್ ಅಧಿಕಾರಿ ಪಿ.ಶ್ರೀನಿವಾಸ್, ಜಿಲ್ಲಾ ವಿಪತ್ತು ನಿರ್ವಹಣಾ ವಿಭಾಗದ ಅಧಿಕಾರಿ ಅನನ್ಯಾ ವಾಸುದೇವ ಇತರರಿದ್ದರು.