ವಿಜಯಪುರ : ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ. ಪ್ರತಿಭಾ ಪುರಸ್ಕಾರವನ್ನು ಸ್ವೀಕರಿಸಿದ ವಿದ್ಯಾರ್ಥಿಗಳು ಪ್ರತಿಯೊಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಸಮಾಜದ, ತಂದೆ ತಾಯಂದಿರ ಕೀರ್ತಿಯ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿಸುವಂತೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ನಗರದ ಕಂದಗಲ್ ಹನುಮಂತರಾಯರ ರಂಗಮಂದಿರದಲ್ಲಿ ಜಿಲ್ಲಾ ಕೋಳಿ ಗಂಗಾಮತ ಸಮಾಜದ ಪ್ರತಿಭಾ ಪುರಸ್ಕಾರ ಸಮಿತಿ ಮತ್ತು ಜ್ಞಾನಗಂಗಾ ವಿವಿಧೋದ್ದೇಶಗಳ ಸಹಕಾರಿ ಸಂಘ ನಿಯಮಿತ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸಮಾಜದ ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ಪ್ರತಿಯೊಬ್ಬರು ಐಎಎಸ್, ಕೆಎಎಸ್ನಂತಹ ಪರೀಕ್ಷೆಗಳಲ್ಲಿ ಪಾಸಾಗಿ ಉನ್ನತ ಹುದ್ದೆಯನ್ನು ಅಲಂಕರಿಸಬೇಕು. ಪ್ರತಿಯೊಬ್ಬರು ಸಮಾಜದಲ್ಲಿ ಹುಟ್ಟಿದ್ದೇವೆ. ಸಮಾಜ ನಮಗಾಗಿ ಏನು ಕೊಟ್ಟಿದೆ ಎನ್ನುವುದಕ್ಕಿಂತ ಸಮಾಜಕ್ಕಾಗಿ ನಾವು-ನೀವು ಏನು ಕೊಟ್ಟಿದ್ದೇವೆ ಎನ್ನುವುದು ಮುಖ್ಯ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಪ್ರತಿಯೊಬ್ಬರಿಗೂ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ. ಇಂತಹ ಕಾರ್ಯ ಚಟುವಟಿಕೆಗಳು ಪ್ರತಿಯೊಂದು ತಾಲೂಕು ಕೇಂದ್ರಗಳಲ್ಲಿ, ಜಿಲ್ಲಾಮಟ್ಟದಲ್ಲಿ, ರಾಜ್ಯಮಟ್ಟದಲ್ಲಿ ಆಯೋಜಿಸಬೇಕು ಎಂದರು.
ಸಮಾಜವೂ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಅಭಿವೃದ್ಧಿಪತದತ್ತ ಸಾಗಬೇಕಾದರೆ ಶಿಕ್ಷಣ ಬೇಕೇ ಬೇಕು. ಪ್ರತಿಯೊಬ್ಬರೂ ಒಗ್ಗಟ್ಟಾಗಿ ಒಂದಾಗಿ ಸಮುದಾಯದ ಅಭಿವೃದ್ಧಿಗೋಸ್ಕರವಾಗಿ ಶ್ರಮಿಸೋಣ ಎಂದು ಹೇಳಿದರು.
ಜಗದ್ಗುರು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಶಾಂತಗಂಗಾಧರ ಸ್ವಾಮೀಜಿ ಸಾನ್ನಿಧ್ಯವಹಿಸಿದ್ದರು. ಡಾ.ಅಶೋಕ ಸಾಸನೂರು ಅಧ್ಯಕ್ಷತೆವಹಿಸಿದ್ದರು. ದತ್ತಾತ್ರೇಯ ರೆಡ್ಡಿ, ಅಶೋಕ ವಾಲಿಕಾರ, ಅಶೋಕ ಪೀರಾಪುರ, ಎಂ.ಎಸ್.ತೋರಗಸ್ತಿ, ಕೆ.ಎನ್. ಓಲೆಕಾರ, ಚಂದ್ರಕಾಂತ್ ಕೋಳಿ, ಭರತ್ ಕೋಳಿ, ಸಾಹೇಬಗೌಡ ಬಿರಾದಾರ, ಶ್ರೀಮಂತ ಝಳಕಿ, ಅನಿಲ್ ಜಮಾದಾರ, ಹನುಮಂತ ಬೂದಿಹಾಳ ಮತ್ತಿತರರಿದ್ದರು.