ಬಳ್ಳಾರಿ: ಸಾವಿರಾರು ವಿದ್ಯುತ್ ಗುತ್ತಿಗೆ ನೌಕರರನ್ನು ಈವರೆಗೂ ರಾಜ್ಯ ಸರ್ಕಾರ ಕಾಯಂಗೊಳಿಸಿಲ್ಲ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ವಿದ್ಯುತ್ ಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು ಎಂಬ ಕಾರ್ಮಿಕ ನ್ಯಾಯಾಲಯದ ತೀರ್ಪಿಗೂ ಸರ್ಕಾರ ಬೆಲೆ ನೀಡಿಲ್ಲ. ಇದರ ವಿರುದ್ಧ ಗುತ್ತಿಗೆ ನೌಕರರು ಸಂಘಟಿತರಾಗಿ ಹೋರಾಡಬೇಕು ಎಂದು ಕೆಪಿಟಿಸಿಎಲ್ ವಿದ್ಯುತ್ ವಿತರಣಾ ಗುತ್ತಿಗೆ ಕಾರ್ಮಿಕರ ಸಂಘದ ರಾಜ್ಯ ಕಾರ್ಯದರ್ಶಿ ತಿರುಮಲ ರಾವ್ ಹೇಳಿದರು.


ಇದನ್ನೂ ಓದಿ:ರಾಜ್ಯದಲ್ಲಿ ‘ಗ್ರೀನ್ ಹೈಡ್ರೋಜನ್‘ನ್ಗೆ ಶೀಘ್ರ ಹೊಸ ನೀತಿ – ಇಂಧನ ಸಚಿವ ಕೆ.ಜೆ. ಜಾರ್ಜ್
ನಗರದ ಎಐಟಿಯುಸಿ ಕಚೇರಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್)ದ ವಿದ್ಯುತ್ ವಿತರಣಾ ಗುತ್ತಿಗೆ ಕಾರ್ಮಿಕರ ಸಂಘದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದರು. ಗುತ್ತಿಗೆ ನೌಕರರನ್ನು ಕಾಯಂಗೊಳಿಸುವವರೆಗೂ ಒಳಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಬೇಕು. ಸುಪ್ರೀಂಕೋರ್ಟ್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕನಿಷ್ಠ ವೇತನ, ಪಿಎಫ್, ಇಎಸ್ಐ, ಬೋನಸ್, ರಜೆ, ಪೇಮೆಂಟ್ ಸ್ಲಿಪ್ ಮುಂತಾದ ಶಾಸನಬದ್ಧ ಸೌಲಭ್ಯಗಳನ್ನು ಖಾತ್ರಿ ಮಾಡಬೇಕು ಎಂದರು.
ಕೆಪಿಟಿಸಿಎಲ್ ವಿದ್ಯುತ್ ವಿತರಣಾ ಗುತ್ತಿಗೆ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿ ರಚಿಸಲಾಯಿತು. ಅಧ್ಯಕ್ಷ ಡಾ.ಪ್ರಮೋದ್. ಕಾರ್ಯದರ್ಶಿ ಎಂ.ಸಿ.ಕಿರಣ್, ಉಪಾಧ್ಯಕ್ಷರಾಗಿ ರಾಘವೇಂದ್ರ, ಮೋದಿನ್ ಬಾಷಾ, ಜಂಟಿ ಕಾರ್ಯದರ್ಶಿಯಾಗಿ ಸುರೇಶ್ ಅವರನ್ನು ನೇಮಕ ಮಾಡಲಾಯಿತು.