ಎನ್.ಆರ್.ಪುರ: ಹೆಣ್ಣು ಸಮಾಜದ ಕಣ್ಣಾಗಿದ್ದು, ಹೆಣ್ಣಿಗೆ ಗೌರವ ನೀಡುವುದನ್ನು ರೂಢಿಸಿಕೊಳ್ಳಬೇಕು ಎಂದು ಮುತ್ತಿನಕೊಪ್ಪ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಆಶಾ ವಿಶ್ವನಾಥ್ ತಿಳಿಸಿದರು.
ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ತಾಲೂಕು ಕಸಾಪ ಹಾಗೂ ಆರೋಗ್ಯ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಹೆಣ್ಣು ಭ್ರೂಣ ಹತ್ಯೆ ತಡೆ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಮಹಿಳೆಯರನ್ನು ಗೌರವಿಸುವಲ್ಲಿ ದೇವತೆಗಳು ನೆಲೆಸುತ್ತಾರೆ. ಮಹಿಳೆಯರಿಗೆ ಅಪಮಾನ ಮಾಡಿದರೆ, ದೌರ್ಜನ್ಯ ಮಾಡಿ ನಂತರ ಯಜ್ಞ, ಯಾಗಗಳನ್ನು ಮಾಡಿದರೂ ಅಲ್ಲಿ ದೇವತೆಗಳು ನೆಲೆಸುವುದಿಲ್ಲ ಎಂದರು.
ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನ ಮಾನ ಸಿಗುತ್ತಿಲ್ಲ. ಸ್ತ್ರೀಯರು ಸಂತೋಷದಿಂದ ಬದುಕಿದರೆ ಕುಟುಂಬವೂ ನೆಮ್ಮದಿಯಿಂದ ಇರುತ್ತದೆ ಎಂದು ಹೇಳಿದರು.
ತಾಲೂಕು ಕಸಾಪ ಅಧ್ಯಕ್ಷ ಎಚ್.ಎಸ್.ಪೂರ್ಣೇಶ್ ಮಾತನಾಡಿ, ತಾಲೂಕು ಕಸಾಪ ಎಲ್ಲ ಕ್ಷೇತ್ರಗಳಲ್ಲೂ ವಿನೂತನ ಕಾರ್ಯಕ್ರಮ ನಡೆಸಿ ಕನ್ನಡ ಭಾಷೆ ಮಹತ್ವ ತಿಳಿಸುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ಹಾಗೂ ಆರೋಗ್ಯ ಸಿಬ್ಬಂದಿಗೆ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು ಎಂದರು.
ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ಸುರೇಶ್ ಮಾತನಾಡಿ, ಸಂಸಾರದಲ್ಲಿ ಹೆಣ್ಣು ಸರ್ವಸ್ವವಾಗಿದ್ದಾಳೆ. ಹೆಣ್ಣು ಭ್ರೂಣ ಹತ್ಯೆ ಮಹಾಪಾಪ. ಭ್ರೂಣ ಹತ್ಯೆ ತಡೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದು ತಿಳಿಸಿದರು.
ಗಾಯಕಿ ಭಾನುಮತಿ, ಡಾ. ಸುರೇಶ್ಕುಮಾರ್ ಹಾಗೂ ಉಪನ್ಯಾಸಕಿ ಆಶಾ ವಿಶ್ವನಾಥ್ ಅವರನ್ನು ಸನ್ಮಾನಿಸಲಾಯಿತು.
ಕಸಾಪ ಕಸಬಾ ಹೋಬಳಿ ಅಧ್ಯಕ್ಷೆ ಜುಬೇದಾ, ಜ್ವಾಲಾಮಾಲಿನಿ ಜೇಸಿ ಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಕೆ.ಗಂಗಾಧರ್, ಕಸಾಪ ಖಜಾಂಚಿ ಕೆ.ಎಸ್.ರಾಜಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿ ದರ್ಶನ್ ಇದ್ದರು.