ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ಪಡೆ ಮೇಲೆ ಅಪರಿಚಿತರು ಮಂಗಳವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ.
ದಕ್ಷಿಣ ದೆಹಲಿಯ ಅರುಣಾ ಅಸಫ್ ಅಲಿ ಮಾರ್ಗದಲ್ಲಿರುವ ದೇವಾಲಯದಿಂದ ಹಿಂದಿರುಗುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ದಾಳಿಯಿಂದ ಶಾಸಕ ನರೇಶ್ ಯಾದವ್ ಯಾವುದೇ ಗಾಯಗಳಾಗದೆ ಪಾರಾಗಿದ್ದಾರೆ.
ಆದರೆ ಗುಂಡಿನ ದಾಳಿಯಲ್ಲಿ ಎಎಪಿ ಕಾರ್ಯಕರ್ತ ಅಶೋಕ್ ಮನ್ಜಿ ಮೃತಪಟ್ಟಿದ್ದರೇ ಕಾರ್ಯಕರ್ತ ಹರೇಂದರ್ ಜಿ ಗಾಯಗೊಂಡಿದ್ದಾರೆ.
ಇಬ್ಬರು ವ್ಯಕ್ತಿಗಳು ಬಂದು 4 ಸುತ್ತು ಗುಂಡು ಹಾರಿಸಿದರು. ಅವರು ನನ್ನನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆಯೇ ಎಂಬುದು ಗೊತ್ತಿಲ್ಲ. ಆದರೆ ದಾಳಿಕೋರರು ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡಿದ್ದರು. ಗುಂಡಿನ ದಾಳಿ ನಡೆಸಿ ಕತ್ತಲಲ್ಲಿ ಪರಾರಿಯಾದರು ಎಂದು ಶಾಸಕ ನರೇಶ್ ಯಾದವ್ ತಿಳಿಸಿದ್ದಾರೆ. ದೆಹಲಿ ಪೊಲೀಸರು ದಾಳಿ ನಡೆಸಿದ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.
ದಾಳಿಕೋರರು ಎಎಪಿ ಶಾಸಕ ನರೇಶ್ ಯಾದವ್ ಅವರನ್ನು ಗುರಿಯಾಗಿಸಿಕೊಂಡಿರಲಿಲ್ಲ. ಬದಲಾಗಿ ಸ್ವಯಂ ಸೇವಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದು ಪತ್ತೆಯಾಗಿದೆ. ಸ್ಥಳದಲ್ಲಿ ಇದ್ದ ಎಲ್ಲ ಸಿಸಿಟಿವಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಎಲ್ಲ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಡಿಸಿಪಿ ಇಂಗಿತ್ ಪ್ರತಾಪ್ಸಿಂಗ್ ಹೇಳಿದ್ದಾರೆ. (ಏಜೆನ್ಸೀಸ್)