ವಿಜಯವಾಣಿ ಸುದ್ದಿಜಾಲ ಸುಳ್ಯ
ಪರಿಶುದ್ಧವಾದ ಮನಸ್ಸಿನಿಂದ ಸ್ಮರಿಸಿ, ಆರಾಧಿಸಿದರೆ ಭಗವಂತನು ಒಲಿದು ದುಃಖಿತ ಮನಸ್ಸಿಗೆ ಸಾಂತ್ವನ ದೊರೆಯುತ್ತದೆ ಎಂದು ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.
ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾಪನಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ನಡೆದ ಮೊದಲ ದಿನದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಅರಕಲಗೋಡು ಅರೆಮಾದನಹಳ್ಳಿ ವಿಶ್ವಕರ್ಮ ಜಗದ್ಗುರು ಪೀಠದ ಅನಂತ ಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮಿ ಆಶೀರ್ವಚನ ನೀಡಿ, ನಾವು ಸನ್ಮಾರ್ಗದಲ್ಲಿ ನಡೆದು ಭಾರತೀಯ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು. ಪಾಶ್ಚಾತ್ಯ ಸಂಸ್ಕೃತಿಯ ಬದಲಾಗಿ ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸಲು ಪಾಲಕರು ಪ್ರಯತ್ನಿಸಬೇಕು ಎಂದರು.
ಖ್ಯಾತ ವಾಗ್ಮಿ ಶ್ರೀದೇವಿ ಪುತ್ತೂರು ಧಾರ್ಮಿಕ ಉಪನ್ಯಾಸ ನೀಡಿದರು ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿದರು. ಮಂಡೆಕೋಲು ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ದೇಗುಲದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಮಾಜಿ ಶಾಸಕ ಸಂಜೀವ ಮಠಂದೂರು, ನೆಲ್ಲಿತಟ್ಟು ಶ್ರೀ ಮಹಾವಿಷ್ಣು ಅಧ್ಯಕ್ಷ ಎ.ಎನ್.ಅಶೋಕ್ ಕುಮಾರ್, ಸುಳ್ಯ ಪಿ.ಎಲ್.ಡಿ ಬ್ಯಾಂಕ್ನ ಅಧ್ಯಕ್ಷ ಪ್ರಭಾಕರ ನಾಯಕ್, ಕಣೆಮರಡ್ಕ ವಿಷ್ಣುಮೂರ್ತಿ ದೈವಸ್ಥಾನದ ಅಧ್ಯಕ್ಷ ಪೂರ್ಣಚಂದ್ರ ಕಣೆಮರಡ್ಕ ಉಪಸ್ಥಿತರಿದ್ದರು.ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರ ತಂದ ಸ್ಮರಣ ಸಂಚಿಕೆ ’ಸಿರಿ ಸಂಪದ’ವನ್ನು ಸ್ವಾಮೀಜಿಗಳು ಬಿಡುಗಡೆ ಮಾಡಿದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಕಣೆಮರಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಸ್ತರ್ ಕೇನಾಜೆ ವಂದಿಸಿದರು. ಅಚ್ಚುತ ಅಟ್ಲೂರು ಹಾಗೂ ಗಣೇಶ್ ಆಚಾರ್ಯ ನಿರೂಪಿಸಿದರು. ಬಳಿಕ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದವರ ಮನರಂಜಿಸಿದವು.
ಧರ್ಮಮಾರ್ಗದಲ್ಲಿ ಸಂಸ್ಕಾರಯುತ ಜೀವನ ನಡೆಸಿದರೆ ಬದುಕಿನಲ್ಲಿ ಮೋಕ್ಷ ದೊರೆಯುತ್ತದೆ. ಊರ ದೇವರ ಸೇವೆಯಲ್ಲಿ ತೊಡಗುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಆ ಅದ್ಭುತ ಅವಕಾಶವನ್ನು ತಪ್ಪಿಸಿಕೊಳ್ಳುವುದು ತರವಲ್ಲ.
– ಶ್ರೀದೇವಿ ಪುತ್ತೂರು, ಖ್ಯಾತ ವಾಗ್ಮಿ