ಮದ್ದೂರು: ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡದೆ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡಬೇಕು ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.
ತಾಲೂಕಿನ ನಗರಕೆರೆ ಗ್ರಾಮದಲ್ಲಿ ಶನಿವಾರ ಗ್ರಾಮದ ಅಂಗನವಾಡಿ ಕಾಂಪೌಂಡ್ ಉದ್ಘಾಟಿಸಿ ಮಾತನಾಡಿದರು. ಹಣ, ಆಸ್ತಿ, ಐಶ್ವರ್ಯವನ್ನು ಯಾರು ಬೇಕಾದರೂ ಕದಿಯಬಹುದು. ಆದರೆ, ವಿದ್ಯೆಯನ್ನು ಯಾರೂ ಕದಿಯಲಾಗದು. ಆದ್ದರಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ ಎಂದು ಮನವಿ ಮಾಡಿದರು.
ಕ್ಷೇತ್ರದಲ್ಲಿ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಪೂರಕವಾದ ವಾತಾವರಣ ನಿರ್ಮಿಸಲು ನಾನು ಈಗಾಗಲೇ ಕ್ರಮ ಕೈಗೊಂಡಿದ್ದು, ಹೊಸ ಶಾಲೆಗಳ ಕೊಠಡಿ ನಿರ್ಮಾಣ, ಕುಡಿಯುವ ನೀರು, ಶೌಚಗೃಹ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷೆ ಶಿಲ್ಪಾ, ಮುಖಂಡರಾದ ರಿತೇಶ್ಗೌಡ, ಪ್ರವೀಣ್, ಮಹೇಶ್, ರಘು, ಧನಂಜಯ, ಅಭಿಲಾಷ್, ಲಿಂಗಪ್ಪ, ಸತೀಶ್, ಆನಂದ್ ಇತರರು ಇದ್ದರು.