ಮಂಡ್ಯ: ಮಂಡ್ಯ ವಿಶ್ವವಿದ್ಯಾಲಯವನ್ನು ಉಳಿಸಲು ದಕ್ಷ ವಿಶೇಷಾಧಿಕಾರಿಯನ್ನು ನೇಮಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಸರ್ಕಾರಿ ಮಹಾವಿದ್ಯಾಲಯ(ಸ್ವಾಯತ್ತ)ವನ್ನು ಮಂಡ್ಯ ವಿಶ್ವವಿದ್ಯಾಲಯವಾಗಿ ಪರಿವರ್ತಿಸಿ ಡಾ.ಮಹದೇವನಾಯಕ್ ಎಂಬುವರನ್ನು ವಿಶೇಷಾಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಇವರು ಕಾನೂನು ಉಲ್ಲಂಘಿಸಿ ಅತಿಥಿ ಉಪನ್ಯಾಸಕರ ನೇಮಕದಲ್ಲಿ ಅವ್ಯವಹಾರ ನಡೆಸಿದ್ದಾರೆ. ವಿದ್ಯಾರ್ಥಿಗಳಿಂದ ದುಪ್ಪಟ್ಟು ಶುಲ್ಕ ವಸೂಲಿ ಮಾಡಿದ್ದಾರೆಂಬ ಎಂಬ ಆರೋಪ ಕೇಳಿಬಂದಿದೆ.
ಸರ್ಕಾರ ಇತ್ತೀಚಿಗೆ ವಿವಿ ವಿದ್ಯಾರ್ಥಿಗಳಿಗೆ ಮಹಾವಿದ್ಯಾಲಯ(ಸ್ವಾಯತ್ತ)ದ ಶೀರ್ಷಿಕೆಯಡಿಯೇ ಪರೀಕ್ಷೆ ಬರೆಯುವಂತೆ ಸೂಚಿಸಿದ್ದು, ಇದರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ವಿವಿಯನ್ನು ಮತ್ತೆ ಮಹಾವಿದ್ಯಾಲಯವನ್ನಾಗಿ ಬದಲಾಯಿಸುತ್ತಾರೆನ್ನುವ ಮಾತು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಉತ್ತಮ ಅಧಿಕಾರಿಯನ್ನು ನೇಮಿಸಿ ವಿವಿಯನ್ನು ಉಳಿಸಬೇಕು. ವಿದ್ಯಾರ್ಥಿಗಳಿಂದ ವಸೂಲಿ ಮಾಡಿರುವ ಹೆಚ್ಚುವರಿ ಶುಲ್ಕವನ್ನು ಹಿಂದಿನ ವಿಶೇಷಾಧಿಕಾರಿಯಿಂದಲೇ ವಸೂಲಿ ಮಾಡಬೇಕು. ಅವ್ಯವಹಾರ ನಡೆದಿದ್ದರೆ ಅದರಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾಧ್ಯಕ್ಷ ಎಂ.ಪುಟ್ಟಮಾಧು, ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಬಿ.ಎಂ.ಶಿವಮಲ್ಲಯ್ಯ, ಸರೋಜಮ್ಮ, ಎಚ್.ಸಿ.ನಾಗರಾಜು, ಶಂಕರಪ್ಪ ಇತರರಿದ್ದರು.