ಮಂಗಳೂರು: ಕೇಂದ್ರ ಸರ್ಕಾರದ ಬ್ಲೂ ಫ್ಲಾೃಗ್ ಯೋಜನೆಯಡಿ ಆಯ್ಕೆಯಾಗಿರುವ ತಣ್ಣೀರುಬಾವಿ ಬೀಚ್ನಲ್ಲಿ ಬಿವಿಜಿ ಇಂಡಿಯಾ ಲಿಮಿಟೆಡ್ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ನಿರ್ವಹಿಸುವ ಕಾಮಗಾರಿಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬ್ಲೂ ಫ್ಲಾೃಗ್ ಯೋಜನೆಯ ಕಾಮಗಾರಿಗಳ ಕುರಿತಂತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೀಚ್ನಲ್ಲಿ ಬಿವಿಜಿ ಇಂಡಿಯಾ ಲಿಮಿಟೆಡ್ ಆಹಾರ ಮಳಿಗೆಗಳು, ಶೌಚಗೃಹ, ವಾಹನಗಳ ಪಾರ್ಕಿಂಗ್ ಮೊದಲಾದ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ. ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗುವ ಕಾಮಗಾರಿಗಳಲ್ಲೂ ಇದು ಪುನರಾವರ್ತನೆಗೊಳ್ಳದಂತೆ ಎಚ್ಚರ ವಹಿಸಬೇಕು. ಅದಕ್ಕಾಗಿ ಸ್ಮಾರ್ಟ್ ಸಿಟಿ ಹಾಗೂ ಬಿವಿಜಿ ಇಂಡಿಯಾ ಲಿಮಿಟೆಡ್ ಪರಸ್ಪರ ಚರ್ಚಿಸಿ ವ್ಯವಸ್ಥಿತವಾಗಿ ಕಾಮಗಾರಿಗಳನ್ನು ನಿರ್ವಹಿಸುವಂತೆ ಸೂಚಿಸಿದರು.
ಬಿವಿಜಿ ಇಂಡಿಯಾ ಲಿಮಿಟೆಡ್ ಬೀಚ್ನಲ್ಲಿ ಕೈಗೊಳ್ಳದ ಇತರೆ ಅಗತ್ಯ ಕಾಮಗಾರಿಗಳಾದ ಅಮ್ಯೂಸ್ಮೆಂಟ್ ಪಾರ್ಕ್, ಮಕ್ಕಳ ಆಟಕ್ಕೆ ಉದ್ಯಾನವನ ಸೇರಿದಂತೆ ಇತರೆ ಕಾಮಗಾರಿಗಳನ್ನು ನಿರ್ವಹಿಸುವಂತೆ ಅವರು ತಿಳಿಸಿದರು.
ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಮಿಶ್ರ, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಮಾಣಿಕ್ಯ ಸೇರಿದಂತೆ ಸ್ಮಾರ್ಟ್ ಸಿಟಿಯ ಅಧಿಕಾರಿಗಳು, ಬಿವಿಜಿ ಇಂಡಿಯಾ ಲಿಮಿಟೆಡ್ ಡಿಜಿಎಂ ಪ್ರಕಾಶ್ ದೇಶಪಾಂಡೆ ಮೊದಲಾದವರಿದ್ದರು.